ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನಿಟ್ಟಾರು ಅವರ ನಿವಾಸಕ್ಕೆ ಗುರುವಾರ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೆಲವೇ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಹತ್ಯೆಯಾಗಿದ್ದ ಮಸೂದ್ ಅವರ ಮನೆಗೆ ಭೇಟಿ ನೀಡಿದೇ ಇರುವುದನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ. ದುಷ್ಕರ್ಮಿಗಳನ್ನು ಮಟ್ಟ ಹಾಕಲು ಉತ್ತರ ಪ್ರದೇಶದ ಬೊಲ್ಡೋಜರ್ ಮಾದರಿ ಅನುಸರಿಸುವ ಸಿಎಂ ಮಾತಿಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು.
— H D Kumaraswamy (@hd_kumaraswamy) July 29, 2022
ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ ʼಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಮುಖ್ಯಮಂತ್ರಿ @BSBommai ಅವರು.1/7
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ ʼಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಮುಖ್ಯಮಂತ್ರಿ ಬೊಮ್ಮಾಯಿ ಅವರು’ ಎಂದಿದ್ದಾರೆ.
‘ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ (ಗುರುವಾರ) ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ. ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ. ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ? ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೇ ಗೊತ್ತಿಲ್ಲದಿದ್ದರೆ ಹೇಗೆ? ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.
‘ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ʼಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ. ʼಯೋಗಿ ಅದಿತ್ಯನಾಥ್ ಮಾದರಿʼ ಎನ್ನುತ್ತಿದ್ದಾರೆ. ಉತ್ತರ ಪ್ರದೇಶದ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ. ಸಂವಿಧಾನದ ಮೇಲೆ ಗೌರವ ಇಲ್ಲದವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ ʼಹೊಸ ಮಾರಿʼಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ‘ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
‘ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ’ ಎಂದು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಉತ್ತರ ಪ್ರದೇಶ ಮಾದರಿಯನ್ನು ಅನುಸರಿಸಬೇಕು ಎಂಬ ಮಾತುಗಳೂ ಕೇಳಿಬಂದಿವೆ. ಅಗತ್ಯ ಬಿದ್ದರೆ ಯೋಗಿ ಮಾಡೆಲ್ ಅನ್ನು ಅನುಸರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.