ಆಗ ಮಧ್ಯಪ್ರವೇಶಿಸಿದ ಬೊಮ್ಮಾಯಿ, ‘ತಮಿಳುನಾಡಿನೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇನೆ. ಮೇಕೆದಾಟು ಯೋಜನೆಯ ಬಗ್ಗೆ 2018ರಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದ್ದು, ಅದಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಅನುಮತಿ ಸಿಗಬೇಕಿದೆ. ಪರಿಸರ ಅನುಮೋದನೆಯೂ ಬಾಕಿ ಇದೆ. ಇನ್ನೊಂದೆಡೆ, ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಎಲ್ಲ ವಿಷಯಗಳ ಬಗ್ಗೆ ರಾಜ್ಯದ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸುತ್ತೇನೆ. ಸರ್ವಪಕ್ಷ ಸಭೆ ನಡೆಸಿದ ಬಳಿಕ ಕೇಂದ್ರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು’ ಎಂದರು.