ಬೆಂಗಳೂರು: ಮೇಕೆದಾಟು ಯೋಜನೆಯ ಬಗ್ಗೆ ಸಂಪೂರ್ಣ ಅರಿವಿದ್ದು, ರಾಜ್ಯಕ್ಕೆ ನ್ಯಾಯ ಒದಗಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೇಂದ್ರ ಸಚಿವರ ಜತೆಗಿನ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಮೇಕೆದಾಟು ಅಲ್ಲದೆ, ಕೃಷ್ಣಾ ಮೇಲ್ದಂಡೆ, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದ ವಿವಿಧ ಇಲಾಖೆಗಳ ಅನುಮತಿಯ ನೀಡುವ ಬಗ್ಗೆಯೂ ಅವರು ಭರವಸೆ ನೀಡಿದರು ಎಂದರು.
‘ಮೇಕೆದಾಟು ವಿಚಾರವಾಗಿ ತಮಿಳುನಾಡು ಏನೇ ನಿರ್ಧಾರ ತೆಗೆದುಕೊಂಡಿರಬಹುದು. ಅದು ನಮಗೆ ಸಂಬಂಧವಿಲ್ಲ, ನಮ್ಮ ರಾಜ್ಯದ ಯೋಜನೆಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುವುದು ನಮ್ಮ ಹಕ್ಕು. ಅದನ್ನು ಮಾಡಿಯೇ ತೀರುತ್ತೇವೆ’ ಎಂದು ಯಡಿಯೂರಪ್ಪ ತಿಳಿಸಿದರು.
‘ನಾವು ನಮ್ಮ ಎಲ್ಲ ನೀರಾವರಿ ಯೋಜನೆಗಳ ಬಗ್ಗೆಯೂ ಅವರ ಜತೆ ಚರ್ಚಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾಗಿರುವ ಮನೆ– ಮನೆಗೆ ನಲ್ಲಿ ನೀರು ಒದಗಿಸುವ ಯೋಜನೆಯಡಿ 25 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗುವುದು’ ಎಂದು ಅವರು ಹೇಳಿದರು.
ಮೇಕೆದಾಟು ಯೋಜನೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರದ ಅನುಮತಿ ಬಾಕಿ ಇದೆ. ಕೇಂದ್ರ ಜಲ ಮಂಡಳಿಗೆ ಸಮಗ್ರ ಯೋಜನಾ ವರದಿಯನ್ನು ಸಲ್ಲಿಸಾಗಿದೆ. ಅದೂ ಬಾಕಿ ಇದೆ ಎಂಬುದನ್ನು ಕೇಂದ್ರ ಸಚಿವರ ಗಮನಕ್ಕೆ ತಂದಾಗ, ಎಲ್ಲ ವಿಷಯಗಳೂ ಅರಿವು ಇದೆ. ಅದರ ಬಗ್ಗೆ ಗಮನಹರಿಸುತ್ತೇನೆ, ನ್ಯಾಯ ಒದಗಿಸುತ್ತೇನೆ ಎಂದು ಹೇಳಿದ್ದಾಗಿ ಕಾನೂನು ಸಚಿವ ಬಸವರಾಜಬೊಮ್ಮಾಯಿ ತಿಳಿಸಿದರು.