ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷರ ದಾಸೋಹ l ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ ಶುರು

6 ಸಾವಿರಕ್ಕೂ ಹೆಚ್ಚು ನೌಕರರ ವಜಾಕ್ಕೆ ಆಕ್ರೋಶ l ₹1 ಲಕ್ಷ ಇಡುಗಂಟಿಗೆ ಆಗ್ರಹ
Last Updated 16 ಆಗಸ್ಟ್ 2022, 21:41 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಸಿಯೂಟ ತಯಾರಿಸುವ 6 ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು 60 ವರ್ಷ ವಯೋಮಿತಿ ನೆಪವೊಡ್ಡಿ ಏಕಾಏಕಿ ಕೆಲಸದಿಂದ ಬಿಡುಗಡೆ ಮಾಡಲಾಗಿದ್ದು, ಇವರಿಗೆ ನಿವೃತ್ತಿ ವೇತನ ಹಾಗೂ₹ 1 ಲಕ್ಷ ಇಡುಗಂಟು ನೀಡಬೇಕು’ ಎಂದು ಒತ್ತಾಯಿಸಿ ಮಹಿಳೆಯರು ನಗರದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಂಗಳವಾರ ನಗರಕ್ಕೆ ಬಂದ ಮಹಿಳೆಯರು, ಸಿಐಟಿಯು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಕುಳಿತಿದ್ದಾರೆ. ಅಹೋರಾತ್ರಿಯೂ ಪ್ರತಿಭಟನೆ ಮುಂದುವರಿಯಿತು.

‘ಮಹಿಳೆಯರನ್ನು ಕೆಲಸದಿಂದ ಏಕಾಏಕಿ ಬಿಡುಗಡೆ ಮಾಡಿರುವುದನ್ನು ರದ್ದುಪಡಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಮುಖಂಡರ ನಿಯೋಗದ ಜೊತೆ ಮಾತುಕತೆ ನಡೆಸಿದ್ದ ಸರ್ಕಾರದ ಅಧಿಕಾರಿಗಳು, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ. ಹೀಗಾಗಿ, ಪುನಃ ಧರಣಿ ಆರಂಭಿಸಿದ್ದೇವೆ’ ಎಂದು ಪ್ರತಿಭಟನಕಾರರು ಹೇಳಿದ್ದಾರೆ.

‘ಮಹಿಳೆಯರನ್ನು ಕೆಲಸದಿಂದ ಬಿಡುಗಡೆ ಮಾಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ. ಅವರ ಕುಟುಂಬಗಳು ಕಷ್ಟಕ್ಕೆ ಸಿಲುಕಿವೆ. ಸದ್ಯ ಕೆಲಸ ಮಾಡುತ್ತಿರುವ ಮಹಿಳೆಯರಿಗೂ ಆತಂಕ ಶುರುವಾಗಿದ್ದು, ಸೇವಾ ಭದ್ರತೆಯೇ ಇಲ್ಲದಂತಾಗಿದೆ. ಬಿಡುಗಡೆ ಮಾಡಿರುವ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡುವವರೆಗೂ ಹಾಗೂ ಇತರೆ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದೂ ಪಟ್ಟು ಹಿಡಿದಿದ್ದಾರೆ.

‘ಮಕ್ಕಳಿಗೆ ಬಿಸಿಯೂಟ ತಯಾರಿಸುತ್ತಿರುವ ಮಹಿಳೆಯರು, ಶಿಕ್ಷಣದ ಅಭಿವೃದ್ಧಿಗೂ ಕೊಡುಗೆ ನೀಡುತ್ತಿದ್ದಾರೆ. ಬಿಸಿಯೂಟ ತಯಾರಿಸುವ ಮಹಿಳೆಯರಿಗೆ ಬಜೆಟ್‌ನಲ್ಲಿ ಹೆಚ್ಚಳ ಮಾಡಿರುವ ₹ 1,000 ವೇತನವನ್ನು 2022ರ ಜನವರಿಯಿಂದ ಅನ್ವಯಗೊಳಿಸಬೇಕು. ಬಿಸಿಯೂಟ ಯೋಜನೆ ಕಾಯಂಗೊಳಿಸಬೇಕು. ಅಲ್ಲಿಯವರೆಗೂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಬೇಸಿಗೆ ಮತ್ತು ದಸರಾ ರಜೆಗಳಲ್ಲಿ ವೇತನ ನೀಡಬೇಕು. ಪ್ರತಿ ಶಾಲೆಗೆ ಇಬ್ಬರು ಅಡುಗೆಯವರನ್ನು ನಿಯೋಜಿಸಬೇಕು. ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು’ ಎಂದೂ ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT