ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ದೂರುಗಳ ತನಿಖೆಗೆ ಆಯೋಗ ರಚನೆ: ಬಿ.ಸಿ.ನಾಗೇಶ್

Last Updated 5 ಸೆಪ್ಟೆಂಬರ್ 2022, 19:24 IST
ಅಕ್ಷರ ಗಾತ್ರ

ಬೆಂಗಳೂರು:‘ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು
ಹಾಗೂ ತನಿಖೆ ನಡೆಸಲು ಪ್ರತ್ಯೇಕ ಆಯೋಗ ರಚಿಸಲು ಉದ್ದೇಶಿಸಲಾಗಿದೆ‘ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾ
ರಂಭದಲ್ಲಿ ಮಾತನಾಡಿದ ಅವರು, ‘ಆಯೋಗದ ರಚನೆ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ರೂಪುರೇಷೆಗಳನ್ನು ನೀಡಲಾಗುವುದು’ ಎಂದರು.

‘ಶಿಕ್ಷಕರಿಗೆ ಪ್ರಶಸ್ತಿ ನೀಡುವ ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿದೆ. ಯಾವುದೇ ಪ್ರಭಾವಕ್ಕೆ ಒಳಗಾಗಿಲ್ಲ. ಮುಖ್ಯಮಂತ್ರಿ ಕಚೇರಿಯಿಂದಲೂ ಹಸ್ತಕ್ಷೇಪ ನಡೆದಿಲ್ಲ’ ಎಂದು ಹೇಳಿದರು.

‘ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಶಿಕ್ಷಕರನ್ನು ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಹಲವರು ಸಲಹೆ ನೀಡಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಫಲಿತಾಂಶ ಪ್ರಕಟಿಸಲಾಗಿದೆ. ಶೀಘ್ರ 1:2 ಅನುಪಾತದಲ್ಲಿ ಪಟ್ಟಿ ಪ್ರಕಟಿಸಲಾಗುವುದು. 778 ಪಿಯು ಉಪನ್ಯಾಸಕರ ನೇಮಕಕ್ಕೂ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಬದಲು ಜ್ಯೇಷ್ಠತೆ ಆಧಾರದ ಮೇಲೆ ಪದೋನ್ನತಿ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘ವೇದ, ಪುರಾಣ, ಉಪನಿಷತ್‌ಗಳು ಸುಳ್ಳಿನ ಕಂತೆ ಎಂದೂ ಮತ್ತು ಮಠಮಾನ್ಯಗಳು ನಗಣ್ಯ ಎನ್ನುವಂತೆ ಬಿಂಬಿಸಿ ನಮ್ಮ ಸಂಸ್ಕೃತಿ, ಪರಂಪರೆಯನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ.ಸ್ವಾತಂತ್ರ್ಯ ಹೋರಾಟಗಾರರ ವಿಚಾರಗಳನ್ನು ಪಠ್ಯಕ್ಕೆ ಸೇರಿಸಿದರೆ ವಿರೋಧಿಸುವ ಮನಸ್ಥಿತಿ ಇರುವುದು ದುರದೃಷ್ಟಕರ.ಇಂತಹ ಸನ್ನಿವೇಶ ಬದಲಾಯಿಸಿ, ನೈಜ ಇತಿಹಾಸದ ಬಗ್ಗೆ ಬೋಧನೆ ಮಾಡಲಾಗುವುದು’ ಎಂದು ಪ್ರತಿಪಾದಿಸಿದರು.

ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲೆಗಳ 20 ಮತ್ತು ಪ್ರೌಢಶಾಲೆಗಳ 11 ಶಿಕ್ಷಕರು ಹಾಗೂ ಸ್ವಾಭಿಮಾನಿ ಶಾಲೆಯ ಎಂಟು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಖಾಲಿಯಾಗುವ ಶಿಕ್ಷಕ ಹುದ್ದೆಗಳಿಗೆ ತಕ್ಷಣವೇ ನೇಮಕ: ಬೊಮ್ಮಾಯಿ

‘ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆಯನ್ನು ವರ್ಷದ ಮುನ್ನವೇ ಲೆಕ್ಕ ಹಾಕಿ, ಹುದ್ದೆ ಖಾಲಿಯಾಗುತ್ತಿದ್ದಂತೆ ಬದಲಿ ನೇಮಕ ಮಾಡುವ ವ್ಯವಸ್ಥೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಶಿಕ್ಷಣ ಕ್ಷೇತ್ರಕ್ಕೆ ಈ ವರ್ಷದ ಬಜೆಟ್‌ನಲ್ಲಿ ₹25 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಸುಮಾರು ₹19 ಸಾವಿರ ಕೋಟಿ ಶಿಕ್ಷಕರು ಮತ್ತು ಸಿಬ್ಬಂದಿ ವೇತನಕ್ಕೆ ಖರ್ಚಾಗುತ್ತದೆ. ಉಳಿದ ಅನುದಾನದಲ್ಲಿ ₹5 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಈ ಮೊತ್ತ ದಲ್ಲಿ 23 ಸಾವಿರ ಶಾಲೆಗಳನ್ನು ಹೊಸದಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 8,101 ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ ಇಷ್ಟೊಂದು ಶಾಲೆಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ’ ಎಂದು ವಿವರಿಸಿದರು.

‘ಎಲ್ಲ ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಮತ್ತು ಗಂಡಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ವರ್ಷದ ಆಗಸ್ಟ್ 15ರ ಒಳಗೆ ಎಲ್ಲ ಸರ್ಕಾರಿ ಶಾಲೆಗಳಲ್ಲಿಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.

‘ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಯಾವುದೇ ಪರಿಶೀಲನೆ ಇಲ್ಲದೆ ಹೊಸ ಶಾಲೆಗಳ ಸ್ಥಾಪನೆಗೆ ನಿರಾಕ್ಷೇಪಣಾ ಪತ್ರ ನೀಡುತ್ತಿರುವ ಪ್ರಕರಣಗಳನ್ನು ಗಮನಿಸಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT