ಬೆಂಗಳೂರು: ಕೋವಿಡ್ ಮೂರನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ನಗರದ ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
‘ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಅದಕ್ಕಾಗಿ ಈಗಿನಿಂದಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುವುದು. ಮೂರು–ನಾಲ್ಕು ದಿನಗಳಲ್ಲಿ ಈ ಸಂಬಂಧ ಕಾರ್ಯಪಡೆ ರಚನೆ ಆಗಲಿದೆ’ ಎಂದರು.
ಎಲ್ಲ ಆಸ್ಪತ್ರೆಗಳ ಆವರಣದಲ್ಲಿ ಮಕ್ಕಳಿಗಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದೂ ಅವರು ತಿಳಿಸಿದರು.