ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಲ್ಲಿ ಕೋವಿಡ್‌ ರೋಗಿಗಳಿಗಾಗಿ ಸಂಚಾರಿ ‘ಆಮ್ಲಜನಕ ಬಸ್‌’

Last Updated 11 ಮೇ 2021, 14:28 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರು ಆಮ್ಲಜನಕಕ್ಕಾಗಿ ಪರಿತಪಿಸುವುದನ್ನು ತಪ್ಪಿಸಲು ಖಾಸಗಿ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ ಬಿ.ಎಂ.ಟಿ.ಸಿ. ಸಂಸ್ಥೆಯು ಪ್ರಾಯೋಗಿಕವಾಗಿ ಸಂಚಾರಿ ಆಮ್ಲಜನಕ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಮ್ಲಜನಕ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬಸ್ಸಿನಲ್ಲಿಯೇ ತುರ್ತು ಆಮ್ಲಜನಕ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.

ಆಮ್ಲಜನಕ ಪೂರೈಸುವ ಈ ವಿಶೇಷ ಬಸ್ಸನ್ನು ಸರ್ಕಾರಿ ಆಸ್ಪತ್ರೆಯ (ಕೆ.ಸಿ. ಜನರಲ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆ) ಆವರಣದಲ್ಲಿ ನಿಲ್ಲಿಸಲಾಗುವುದು ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಮ್ಲಜನಕ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಮ್ಲಜನಕ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿ.ಎಂ.ಟಿ.ಸಿ. ಬಸ್ ಅನ್ನು ಇದಕ್ಕಾಗಿ ಒದಗಿಸಲಾಗಿದೆ.

ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್ಸಿನಲ್ಲಿ ಆಮ್ಲಜನಕ ಸರಬರಾಜು ಮಾಡಿ ಸೇವೆ ನೀಡಲು ಎಲ್ಲಾ ಅಗತ್ಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ. ಏಕಕಾಲಕ್ಕೆ ಒಟ್ಟು ಆರು ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಮ್ಲಜನಕ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ನಂತಹ ಅಪಾಯಕಾರಿ ರೋಗದಿಂದ ತತ್ತರಿಸುತ್ತಾ ಆಮ್ಲಜನಕಕ್ಕಾಗಿ ಪ್ರಯಾಸ ಪಡುವವರಿಗೆ ಇದು ಸಂಜೀವಿನಿ ಆಗಬಲ್ಲದು ಎಂದು ಸವದಿಯವರು ಸ್ಪಷ್ಟಪಡಿಸಿದ್ದಾರೆ.

ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ 'ಆಕ್ಸಿಜನ್ ಆನ್ ವ್ಹೀಲ್ಸ್' ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್ ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯ ದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ.

ಬೆಂಗಳೂರಿನಲ್ಲಿ ನಾಳೆಯಿಂದ ( ಗುರುವಾರ) ಪ್ರಾರಂಭಿಸಲಾಗುವ ಈ ವಿಶೇಷ 'ಆಮ್ಲಜನಕ ಬಸ್ ಸೌಲಭ್ಯ' ಯಶಸ್ವಿಯಾದರೆ ಮುಂದೆ ಇನ್ನಷ್ಟು 'ಆಮ್ಲಜನಕ ಬಸ್ ಸೌಲಭ್ಯ' ನೀಡಲು ಸಾರಿಗೆ ನಿಗಮಗಳಿಂದ ಪ್ರಯತ್ನಿಸಲಾಗುವುದು ಎಂದು ಸವದಿ ತಿಳಿಸಿದ್ದಾರೆ.

ಈ ರೀತಿಯ ಮೊಬೈಲ್ ಆಮ್ಲಜನಕ ಬಸ್ ಪ್ರಯೋಗವು ಇಡೀ ದೇಶದಲ್ಲಿಯೇ ಒಂದು ವಿನೂತನ ಯತ್ನವಾಗಿದೆ. ಇದನ್ನು ಸಾಕಾರಗೊಳಿಸಲು ಫೌಂಡೇಶನ್ ಇಂಡಿಯಾ ಸಂಸ್ಥೆಯ ಸಂಜಯ್ ಗುಪ್ತ ಕೈ ಜೋಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT