ಮಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಬಿರುಸಿನ ಮಳೆಯಾಗಿದ್ದು, ಮುಂಗಾರು ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 25ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ.
‘ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮಳೆಯ ಆರ್ಭಟ ಜೋರಾಗಿತ್ತು. ಜಿಲ್ಲೆಯ ಎಲ್ಲ ತಾಲ್ಲೂಕು ಗಳಲ್ಲಿ ಸುಮಾರು ಎರಡು ತಾಸು ಧಾರಾಕಾರಮಳೆಸುರಿಯಿತು. ಮಂಗ ಳೂರು ನಗರದ ತಗ್ಗು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿ ಯಿತು. ಮೂಲ್ಕಿ ಬಳಿ ರಸ್ತೆಗೆ ಮರ ಉರುಳಿ ಬಿದ್ದಿದ್ದು, ಬಳಿಕ ತೆರವುಗೊಳಿಸಲಾಯಿತು.
ಉಡುಪಿ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿರುಸಿನ ಮಳೆಸುರಿಯುತ್ತಿದೆ. ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದೆ.
ಕಾರವಾರ ವರದಿ: ಜಿಲ್ಲೆಯಲ್ಲಿ ಮಧ್ಯಾಹ್ನದವರೆಗೆ ಧಾರಾಕಾರ ಮಳೆಯಾಯಿತು.ಕಾರವಾರ ನಗರದಲ್ಲಿ ಹಲವೆಡೆ ರಸ್ತೆಗಳು ಜಲಾವೃತವಾದವು. ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆ ನೀರು ನಿಂತು, ಅರ್ಧ ಕಿಲೋಮೀಟರ್ ಹೊಳೆಯಂತಾಗಿತ್ತು. ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲೂ ಧಾರಾಕಾರ ಮಳೆಯಾಗಿದೆ.
ಅರೆ ಮಲೆನಾಡಿನ ಹಳಿಯಾಳ, ಮುಂಡಗೋಡದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿಗೆ ಅನುಕೂಲ ವಾಗಿದೆ. ಸಿದ್ದಾಪುರದಲ್ಲಿ ಜೋರಾಗಿ, ಶಿರಸಿಯಲ್ಲಿ ಸಾಧಾರಣ ಮಳೆಯಾಗಿದೆ.
ಬೆಳಗಾವಿ ವರದಿ: ನಗರ ಹಾಗೂ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ ಸುರಿಯಿತು.
ಜಿಲ್ಲೆಯ ಹಿಡಕಲ್ ಡ್ಯಾಮ್, ಖಾನಾಪುರ, ಕಿತ್ತೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ತುಂತುರು ಮಳೆಯಾಗಿದೆ. ಹುಬ್ಬಳ್ಳಿಯಲ್ಲೂ ಕೆಲಹೊತ್ತು ಮಳೆಯಾಗಿದೆ.
ಗದಗ ವರದಿ: ಜಿಲ್ಲೆಯ ಮುಂಡರಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಒಂದು ತಾಸು ಬಿರುಸಿನ ಮಳೆ ಸುರಿಯಿತು. ಅದೇ ರೀತಿ, ಲಕ್ಷ್ಮೇಶ್ವರ ತಾಲ್ಲೂಕಿನಲ್ಲೂ ಉತ್ತಮ ಮಳೆಯಾಗಿದೆ.ಹೊಸಪೇಟೆಯಲ್ಲಿಯೂ ಬಿರುಸಿನ ಮಳೆಯಾಗಿದೆ.
ಮಡಿಕೇರಿ ವರದಿ: ಕೊಡಗು ಜಿಲ್ಲಾ ಕೇಂದ್ರದಲ್ಲಿ ಬಿರುಸಿನ ಮಳೆ ಸುರಿಯಿತು. ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಿಕೊಪ್ಪಲು ಭಾಗದಲ್ಲಿ ತುಂತುರು ಮಳೆಯಾಗಿದೆ. ಮೈಸೂರಿನಲ್ಲಿ ಕೆಲ ಹೊತ್ತು ಸಾಧಾರಣ ಮಳೆಯಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.