ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣದಲ್ಲಿ ಇನ್ನಷ್ಟು ಗುಣಮಟ್ಟ: ಡಿಸಿಎಂ ಅಶ್ವತ್ಥನಾರಾಯಣ

ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ಸರಕಾರ ಸಿದ್ಧವಿದೆ ಎಂದ ಡಿಸಿಎಂ
Last Updated 25 ಡಿಸೆಂಬರ್ 2020, 9:20 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದೇಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಮಾಜಿ ಪ್ರಧಾನಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ʼಉತ್ತಮ ಆಡಳಿತ ದಿನʼ (ಗುಡ್‌ ಗವರ್ನೆನ್ಸ್‌ ಡೇ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಎಲ್ಲ ಸವಾಲುಗಳನ್ನು ಎದುರಿಸಲು ಹಾಗೂ ವೈಯಕ್ತಿಕವಾಗಿಯೂ ಯಾವುದೇ ಸಮಸ್ಯೆಯನ್ನು ಮೆಟ್ಟಿ ನಿಲ್ಲಲು ಶಿಕ್ಷಣವೇ ಏಕೈಕ ರಾಜಮಾರ್ಗ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲು ಸಿದ್ಧವಿದೆ. ಎಲ್ಲವನ್ನೂ ಸರಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ, ಆಶಯ ಮತ್ತು ಆಡಳಿತದಂತೆಯೇ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು. ಉನ್ನತ ಶಿಕ್ಷಣದಲ್ಲಿ ವಿವಿಧ ಬಗೆಯ ಸಂಸ್ಥೆಗಳಿಗೆ ಸ್ವಾಯತ್ತತೆ ಎಂಬ ಶಕ್ತಿಯನ್ನು ತುಂಬಲು ಸರಕಾರ ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಅಟಲ್‌ ಜೀ ಅವರು ನಮಗೆ ಸ್ಫೂರ್ತಿ ಎಂದರು.

ನೂತನವಾಗಿ ಜಾರಿಗೆ ತರಲಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಸ್ವಾಯತ್ತತೆ ಅಂಶವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ ಎಂದ ಉಪ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಕಟ್ಟಲು, ಅತ್ಯುತ್ತಮ ಕಲಿಕೆ-ಬೋಧನೆ ಹಾಗೂ ಸಂಶೋಧನೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಶಿಕ್ಷಣ ಮತ್ತು ಕೌಶಲ್ಯ

ನಮ್ಮ ಎಲ್ಲ ಸವಾಲು ಮತ್ತು ಸಮಸ್ಯೆಗಳಿಗೆ ಖಚಿತವಾದ ಪರಿಹಾರ ಸಿಗುವುದು ಶಿಕ್ಷಣದಿಂದಲೇ ಎಂಬುದು ನನ್ನ ಅಚಲ ನಂಬಿಕೆ. ಹೀಗಾಗಿ ಉತ್ತಮ ಶಿಕ್ಷಣ ಹಾಗೂ ಸತ್ವಭರಿತ ಕುಶಲತೆಯನ್ನು ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಕೊಡುವ ಮೂಲಕ ನಾವು ಸ್ಪಷ್ಟವಾದ ಫಲಿತಾಂಶಗಳನ್ನು ಸಾಧಿಸಬಹುದು ಎಂದು ಡಿಸಿಎಂ ಪ್ರತಿಪಾದಿಸಿದರು.

ಭಾರತವೂ ಸೇರಿದಂತೆ ಕರ್ನಾಟಕದಲ್ಲೂ ಉದ್ಯೋಗ ಮಾರುಕಟ್ಟೆ ಬೃಹತ್ತಾಗಿದೆ. ಆದರೆ, ಆ ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಉತ್ತಮ, ಕುಶಲತೆಯುಳ್ಳ ಮಾನವ ಸಂಪನ್ಮೂಲವನ್ನು ಒದಗಿಸಲು ನಾವು ವಿಫಲರಾಗಿದ್ದೇವೆ. ಸರಕಾರ ಇದಕ್ಕೆ ಪರಿಹಾರ ಕಂಡುಕೊಂಡಿದ್ದು, ನಮ್ಮ ಯುವಜನರಿಗೆ ಯಾವ ರೀತಿಯ ಕುಶಲತೆ ಬೇಕು ಹಾಗೂ ಜಾಬ್‌ ಮಾರುಕಟ್ಟೆಗೆ ಅವರನ್ನು ಹೇಗೆ ಅಣಿಗೊಳಿಸಬೇಕು ಎಂಬುದನ್ನು ಮನಗಂಡು ಆ ದಿಕ್ಕಿನಲ್ಲಿ ಸಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲರನ್ನೂ ಸ್ವಾಗತಿಸಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌; ಉನ್ನತ ಶಿಕ್ಷಣ-ಕಾಲೇಜು ಶಿಕ್ಷಣ ಇಲಾಖೆಯ ಯಶಸ್ವಿ ಸಾಧನೆಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರಲ್ಲದೆ, ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಸುಧಾರಣೆಗಳು, ಆನ್‌ಲೈನ್‌ ಅಪ್ಲಿಯೇಶನ್‌, ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ವ್ಯವಸ್ಥೆ, ರಾಷ್ಟ್ರೀಯ ಶಿಕ್ಷಣ ನೀತಿ ಇತ್ಯಾದಿ ಅಂಶಗಳ ಮೇಲೆ ಬೆಳಕು ಚೆಲ್ಲಿದರು.

ಜತೆಗೆ, ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ-ನಗರ ಉದ್ಯಮಶೀಲತೆ-ಜೀವನೋಪಾಯ ಇಲಾಖೆ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಾಧನೆಗಳ ಬಗ್ಗೆ ಸಂಬಂಧಿತ ಹಿರಿಯ ಅಧಿಕಾರಿಗಳು ಇದೇ ವೇಳೆ ಪ್ರಾತ್ಯಕ್ಷಿಕೆ ನೀಡಿದರು.

ಐಟಿಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್‌, ಸ್ಟಾರ್ಟ್ಅಪ್ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ವಿಧಾನಪರಿಷತ್‌ ಸದಸ್ಯರಾದ ಚಿದಾನಂದ ಗೌಡ, ಅ.ದೇವೇಗೌಡ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT