ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಇಲ್ಲಿನ ಮುರುಘಾ ಮಠದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.
ಮಠದ ಭಕ್ತರು, ಶರಣರ ಹಿತೈಷಿಗಳು ಮಠಕ್ಕೆ ಭೇಟಿ ನೀಡುತ್ತಿದ್ದು, ಮುರುಘಾ ಶರಣರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮಠದಲ್ಲಿ ಸಭೆ ನಡೆಯುತ್ತಿದ್ದು, ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.
ಮಕ್ಕಳು ಮೈಸೂರಿನ ಒಡನಾಡಿ ಸಂಸ್ಥೆ ಸಂಪರ್ಕಿಸಿದ ಮಾಹಿತಿ ಶುಕ್ರವಾರ ಲಭ್ಯವಾಗುತ್ತಿದ್ದಂತೆ ಮಠದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಎದುರು ಬಾಲಕಿಯರು ಹೇಳಿಕೆ ನೀಡಿದ ಬಳಿಕ ಎಫ್ಐಆರ್ ದಾಖಲಾಗಿದೆ.