ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯು ಶುಕ್ರವಾರ (ಸೆ.3) ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದೆ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ಭಾಗದ ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ.
ಈ ಬಾರಿ ದಸರೆಯು ಅ.7ರಿಂದ 15ವರೆಗೆ ನಡೆಯಲಿದ್ದು, ಪೂರ್ವಸಿದ್ಧತೆ ಆರಂಭವಾಗಿಲ್ಲ. ಕೋವಿಡ್ ಮೂರನೇ ಅಲೆ ಕಾರಣ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರೆ ಬಗ್ಗೆಯೇ ಜನಪ್ರತಿನಿಧಿಗಳು ಒಲವು ತೋರಿದ್ದು, ಅದನ್ನೇ ಸಭೆಯಲ್ಲಿ ಮಂಡಿಸುವುದಾಗಿ ಹೇಳಿದ್ದಾರೆ.
ಉನ್ನತ ಮಟ್ಟದ ಸಮಿತಿಯು ನಾಡಹಬ್ಬದ ಆಚರಣೆ ಬಗ್ಗೆ ತಜ್ಞರ ಸಲಹೆ ಕೇಳುವ ನಿರೀಕ್ಷೆ ಇದೆ. ಕಳೆದ ಬಾರಿಯೂ ದಸರೆ ಸರಳವಾಗಿತ್ತು. ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಸೀಮಿತವಾಗಿ ಕಾರ್ಯಕ್ರಮಗಳು ನಡೆದಿದ್ದವು.