ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯದಿಂದ 18 ಸಾವಿರ ಕ್ಯುಸೆಕ್ ನೀರನ್ನು ಹೊರಗೆ ಹರಿಸುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ತಾಲ್ಲೂಕಿನ ಬೆಳಗೊಳ ಸಮೀಪದ ಎಡಮುರಿ ಮತ್ತು ಬಲಮುರಿ ಹಾಗೂ ಕಾವೇರಿ ಬೋರೇದೇವರ ಅಣೆಕಟ್ಟೆ ಫಾಲ್ಸ್ಗಳಲ್ಲಿ ನೀರು ಧುಮ್ಮಿಕ್ಕುತ್ತಿದೆ. ಕಾವೇರಿ ನದಿ ಬೋರ್ಗರೆದು ಹರಿಯುತ್ತಿದ್ದು, ನಯನ ಮನೋಹರ ದೃಶ್ಯವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ.
ಕಾವೇರಿ ನದಿಯಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಪಟ್ಟಣ ಸಮೀಪದ ಗಂಜಾಂನ ನಿಮಿಷಾಂಬಾ ದೇವಾಲಯದ ಬಳಿ ಯಾರೂ ನದಿಗೆ ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ. ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಎರಡು ವಾರಗಳಿಂದಲೂ ಸ್ಥಗಿತಗೊಂಡಿದೆ.
ಕೆಆರ್ಎಸ್ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ತನ್ನ ಗರಿಷ್ಠ ಮಟ್ಟ (124.80 ಅಡಿ) ತಲುಪಿದೆ. ಹಾಗಾಗಿ ಒಳ ಬರುವ ಅಷ್ಟೂ ನೀರನ್ನು ಹೊರಗೆ ಬಿಡಲಾಗುತ್ತಿದೆ.
‘ಜಲಾಶಯದಲ್ಲಿ ಸದ್ಯ 49.45 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಅವಧಿಯಲ್ಲಿ 47.16 ಟಿಎಂಸಿ ಅಡಿಗಳಷ್ಟು ನೀರಿತ್ತು’ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ರಾಮಮೂರ್ತಿ ತಿಳಿಸಿದ್ದಾರೆ.