ಮೈಸೂರು: ‘ಸಮಸಮಾಜದ ನಿರ್ಮಾಣಕ್ಕಾಗಿ ಹೋರಾಡಿದ್ದ ಬಸವಣ್ಣನ ವಿಚಾರ ಒಂದು ಧರ್ಮಕ್ಕಷ್ಟೇ ಸೀಮಿತವಾದುದಲ್ಲ. ಸಮಾಜದಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಸಮಾನತೆ ಇಂದಿಗೂ ಇರುವುದೇಕೆ ಎಂದು ಎಲ್ಲ ಬಸವ ಭಕ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹೇಳಿದರು.
ನಗರದ ಸುತ್ತೂರು ಶಾಖಾ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ರಜತ ಮಹೋತ್ಸವ ನಿಮಿತ್ತ ‘ಬೆಳ್ಳಿ ಬೆಳಗು’ ಸಮಾರಂಭ ಉದ್ಘಾಟಿಸಿ ಶನಿವಾರ ಮಾತನಾಡಿದರು.
‘ಅಸಮಾನತೆ, ಮೂಢನಂಬಿಕೆ ಹಾಗೂ ಲಿಂಗ ತಾರತಮ್ಯದ ವಿರುದ್ಧ ಬಸವಣ್ಣ ಹೋರಾಡಿದ್ದರು. ಆ ಪದ್ಧತಿಗಳು ಇಂದಿಗೂ ಇವೆ. ಎಲ್ಲರಿಗೂ ಸಮಾನತೆ ದೊರೆತಿಲ್ಲ. ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಸಂಪತ್ತಿನ ಹಂಚಿಕೆಯಾಗಿಲ್ಲ. ಬಸವಣ್ಣ ಈಗಲೂ ಪ್ರಸ್ತುತವಾಗಬೇಕಾದ ಪರಿಸ್ಥಿತಿ ಬರಬೇಕಾಗಿತ್ತಾ’ ಎಂದು ಅವರು ಪ್ರಶ್ನಿಸಿದರು.
‘ಬಸವಣ್ಣನವರ ವಿಚಾರಗಳ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಡಬೇಕು. ಆರ್ಥಿಕ ಅಭಿವೃದ್ಧಿಯಲ್ಲಿ ಎಲ್ಲರಿಗೂ ಪಾಲು ಸಿಗದಿದ್ದರೆ ಸಮಗ್ರ ಅಭಿವೃದ್ಧಿ ಆಗುವುದಿಲ್ಲ’ ಎಂದರು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೀರಶೈವ ಲಿಂಗಾಯತ ಸಂಘ–ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಎಲ್.ಎಸ್.ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.