ಬೆಂಗಳೂರು: ‘ವಿಧಾನ ಪರಿಷತ್ ನೂತನ ಸಭಾಪತಿ ಆಯ್ಕೆ ಫೆ. 9ರಂದು ನಡೆಯಲಿದೆ. ಫೆ. 8ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ’ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ತಿಳಿಸಿದರು.
ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ ಕಾರಣ, ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರು ಚರ್ಚೆಗೆ ಅವಕಾಶ ಕೊಡದೆ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನೂತನ ಸಭಾಪತಿಯಾಗಿ ಬಿಜೆಪಿ ಬೆಂಬಲದಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಖಚಿತವಾಗಿದೆ.
ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ನ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆ ಶುಕ್ರವಾರ ಬೆಳಿಗ್ಗೆ ನಡೆಯಿತು. ಈ ಸಭೆಯಲ್ಲಿ ಕಲಾಪವನ್ನು ಫೆ. 10ರವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಹೊಸಬರ ಆಯ್ಕೆ ಮತ್ತು ಪರಿಷತ್ನಲ್ಲಿ ರಾಜ್ಯಪಾಲರ ಭಾಷಣ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಶುಕ್ರವಾರ (ಫೆ.5) ಮುಗಿಯಬೇಕಿದ್ದ ಕಲಾಪವನ್ನು ಮೂರು ದಿನ ವಿಸ್ತರಿಸಲಾಗಿದೆ.