ಬೆಂಗಳೂರು: ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೇ ಹೊಸ ಕಾಮಗಾರಿಗಳನ್ನು ಮಂಜೂರು ಮಾಡಲು ಅವಕಾಶವಿಲ್ಲ. ಒಂದು ವೇಳೆ ಹೆಚ್ಚುವರಿ ಕಾಮಗಾರಿಗಳನ್ನು ಕೆಳಹಂತದಲ್ಲಿ ಮಂಜೂರು ಮಾಡಿದರೆ ಅಂತಹ ಕಾಮಗಾರಿಗಳಿಗೆ ಅನುದಾನ ಒದಗಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ನ ಸುರೇಶ್ ಗೌಡ ಅವರ ಗಮನ ಸೆಳೆಯುವ ಸೂಚನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಆರ್ಥಿಕ ಇಲಾಖೆಯಿಂದ ಯಾವುದೇ ಕಾಮಗಾರಿಗಳಿಗೆ ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸುತ್ತಿಲ್ಲ. ಆಯವ್ಯಯದಲ್ಲಿ ಅನುಮೋದನೆಯಾದ ಅನುದಾನವನ್ನೇ ಆರ್ಥಿಕ ಇಲಾಖೆಯಿಂದ ಹೊರಡಿಸಲಾಗುವ ಆದೇಶದಂತೆ ಆಡಳಿತ ಇಲಾಖೆಯವರೇ ಬಿಡುಗಡೆಗೊಳಿಸುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಆಯವ್ಯಯದಲ್ಲಿ ಅನುದಾನ ಲಭ್ಯತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿಗಳನ್ನು ಜಾರಿಗೊಳಿಸಲು ಕ್ರಮವಹಿಸಬಹುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.