ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಪರ ಧ್ವನಿ ಎತ್ತಲು ಪಾದಯಾತ್ರೆ ಬಿಟ್ಟು ಬೇರೆ ದಾರಿಯೇ‌ ಇಲ್ಲ: ರಾಹುಲ್ ಗಾಂಧಿ

Last Updated 30 ಸೆಪ್ಟೆಂಬರ್ 2022, 6:01 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ದೇಶ ಎದುರಿಸುತ್ತಿರು ಸಮಸ್ಯೆಗಳು ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳಾದ ದೇಶದ ಸಂಸತ್ತು, ಮಾಧ್ಯಮಗಳು ವಿರೋಧ ಪಕ್ಷದ ಪಾಲಿಗೆ‌ಮುಚ್ಚಿವೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದು ಕಾಂಗ್ರೆಸ್ ನಾಯಕ‌ ರಾಹುಲ್ ಗಾಂಧಿ ಶುಕ್ರವಾರ ಹೇಳಿದರು.

ಗುಂಡ್ಲುಪೇಟೆಯಲ್ಲಿ ಭಾರತ್ ಜೊಡೊ ಯಾತ್ರೆಯಲ್ಲಿ ಮಾತನಾಡಿದ ಅವರು, ' ಮಾಧ್ಯಮಗಳು ಸಂಪೂರ್ಣವಾಗಿ ಸರ್ಕಾರದ ನಿಯಂತ್ರಣದಲ್ಲಿವೆ. ನಮ್ಮ ವಿಚಾರಗಳನ್ನು ಹೇಳುವುದಕ್ಕೆ ಅಲ್ಲಿ ಅವಕಾಶ ಇಲ್ಲ. ಸಂಸತ್ತಿನಲ್ಲಿ ನಾವು ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ. ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶ ಇಲ್ಲ. ಹಾಗಾಗಿ ಪಾದಯಾತ್ರೆ ಬಿಟ್ಟು ಬೇರೆ ರಸ್ತೆ ನಮಗಿಲ್ಲ' ಎಂದರು.

'ಈ ಯಾತ್ರೆ ದೇಶದ ಧ್ವನಿ. ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ' ಎಂದು ರಾಹುಲ್ ಗಾಂಧಿ ಹೇಳಿದರು.

'ಬಿಜೆಪಿ, ಆರ್ ಎಸ್ ಎಸ್ ವಿಚಾರಧಾರೆಗಳು ದೇಶದಲ್ಲಿ ದ್ವೇಷ, ಹಿಂಸೆಯನ್ನು ಸೃಷ್ಟಿಸುತ್ತಿವೆ. ದೇಶದ ಸಂವಿಧಾನ ಇಲ್ಲದಿದ್ದರೆ, ತ್ರಿವರ್ಣ ಧ್ಬಜಕ್ಕೆ ಬೆಲೆ ಇಲ್ಲ. ಸಂವಿಧಾನವನ್ಜು ರಕ್ಷಿಸಬೇಕಾಗಿದೆ. ನಮ ಯಾತ್ರೆಯಲ್ಲಿ ದ್ವೇಷ, ಹಿಂಸೆ‌‌ ಇಲ್ಲ. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುತ್ತೇವೆ. ಯಾತ್ರೆಯಲ್ಲಿ ಯಾರಾದರೂ ಎಡವಿ ಬಿದ್ದರೆ, ಉಳಿದವರು ಅವರನ್ನು ಮೇಲಕ್ಕೆತ್ತಿ ಮುನ್ನಡೆಸುತ್ತಾರೆ. ಬಿದ್ದವನ ಜಾತಿ, ಧರ್ಮ, ಭಾಷೆ ಎಂದು ಯಾರೂ ಕೇಳುವುದಿಲ್ಲ' ಎಂದರು.

ಭಾಷಣ ಕಡಿಮೆ: 'ನಾವಿಲ್ಲಿ ಉದ್ದುದ್ದ ಭಾಷಣ ಮಾಡುವುದಿಲ್ಲ. ಆರೇಳು ಗಂಟೆ ನಡೆಯುತ್ತೇವೆ. 15 ನಿಮಿಷ ಮಾತನಾಡುತ್ತೇವೆ. ಜನರ ಮಾತುಗಳನ್ನು ಕೇಳುತ್ತೇವೆ. ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ, ಸರ್ಕಾರಿ ಸಂಸ್ಥೆಗಳ ಖಾಸಗೀಕರರಣ ಬಗ್ಗೆ ಜನರು ಮಾತನಾಡುತ್ತಿದ್ದಾರೆ' ಎಂದು ರಾಹುಲ್ ಗಾಂಧಿ ಹೇಳಿದರು.

ವೈಯಕ್ತಿಕ ಲಾಭಕ್ಕಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸುರ್ಜೇವಾಲ ಮಾತನಾಡಿ, 'ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಅಥವಾ ವೈಯಕ್ತಿಕ ಲಾಭದ ಸಂಕಲ್ಪದಿಂದ ಈ ಯಾತ್ರೆ ಹಮ್ಮಿಕೊಂಡಿಲ್ಲ. ದೇಶದ ಸಂಕಷ್ಟಗಳಿಗೆ‌ ಮುಕ್ತಿ ನೀಡುವುದು ಅವರ ಉದ್ದೇಶ. ದ್ವೇಷ, ಹಿಂಸೆ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸಲಾಗಿದೆ. ಪ್ರೀತಿಯಿಂದ ದೇಶವನ್ನು ಜೋಡಿಸುವ ಆಶಯ ಅವರದು. 532 ಕಿ.ಮೀ ನಡೆಸಿದ್ದಾರೆ. ಇನ್ನೂ 3000 ಕಿ.ಮೀ ನಡೆಯುವುದಿದೆ. ಈ ಸಂಕಲ್ಪದಲ್ಲಿ ನಾವು ರಾಹುಲ್ ಜೊತೆಗಿರುತ್ತೇವೆ' ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ' ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ' ಎಂದರು.

'ದೇಶವನ್ನು ಧರ್ಮ, ಜಾತಿ ಆಧಾರದಲ್ಲಿ ವಿಭಜಿಸಬೇಕು ಎಂಬುದು ಅವರ ಉದ್ದೇಶ. ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಪ್ರಜಾಪ್ರಭುತ್ವ, ದೇಶದ ಸಂವಿಧಾನ ರಕ್ಷಣೆಗಾಗಿ ನಾವು ಎಲ್ಲ ತ್ಯಾಗಗಳಿಗೂ ಸಿದ್ಧರಾಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಮಾಡುತ್ತಿರುವ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು' ಎಂದರು.

ಸಾವಿರಾರು‌ ಜನರು ಭಾಗಿ: ರಾಜ್ಯ ಪ್ರವೇಶಿಸಿದ ಪಾದಯಾತ್ರೆ ಯ ಮೊದಲ ದಿನ ಸಾವಿರಾರು ಜನರು ಭಾಗಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ‌ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಂದ ಮಾತ್ರವಲ್ಲದೇ ರಾಜ್ಯದಾದ್ಯಂತ ಕಾರ್ಯಕರ್ತರು ಬಂದಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT