ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕೆಲವರು ಸುಖಾಸುಮ್ಮನೆ ವದಂತಿಗಳನ್ನು ಹರಡುತ್ತಿದ್ದಾರೆ ಎಂದರು.
ಹಿಂದೆ ವಿಜಯನಗರದಲ್ಲಿ ತುಂಗಾರತಿ ಮಾಡಲಾಗುತ್ತಿತ್ತು. ಅದೇ ಮಾದರಿಯಲ್ಲಿ ಕಾವೇರಿಯಲ್ಲಿ ನಡೆಸುವ ಬಗ್ಗೆ ಡಿ.ಕೆ.ಶಿವಕುಮಾರ್ ಮಾಹಿತಿ ಕೇಳಿ ಮನೆಗೆ ಬರುವುದಾಗಿ ಹೇಳಿದ್ದರು. ನನಗಿಂತ ಹಿರಿಯರಾದ ಅವರು ಮನೆಗೆ ಬರುವುದು ಬೇಡ, ನಾನೇ ನಿಮ್ಮ ಮನೆಗೆ ಬರುತ್ತೇನೆ ಎಂದು ಅವರ ಮನೆಗೆ ಹೋಗಿದ್ದೆ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಸರಿ ಹೋಗುತ್ತಿಲ್ಲ ಎಂಬ ಕಾರಣಕ್ಕೆ ಆ ಪಕ್ಷ ಬಿಟ್ಟು ಬಿಜೆಪಿ ಸೇರಿದೆವು. ಮತ್ತೆ ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಯವರು ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ನನಗೆ ತೃಪ್ತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದೇನೆ ಎಂದರು.