ನವದೆಹಲಿ: ಇಂಗ್ಲಿಷ್ ಬದಲಿಗೆ ಹಿಂದಿ ಮತ್ತು ಇತರೆ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ. ದೇಶದ ವಿವಿಧ ಭಾಗಗಳ ಮಾತೃಭಾಷೆಗಳಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತೇಜನ ಕೊಡುತ್ತಿದೆ ಎಂದು ಹೇಳಿದರು.
ತಮಿಳುನಾಡು ಬಿಜೆಪಿ ಉಸ್ತುವಾರಿ ಹೊತ್ತಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಹಿಂದಿಯೇತರ ಭಾಷೆಗಳನ್ನು ಮಾತನಾಡುವ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಆರೋಪಗಳನ್ನು ತಳ್ಳಿ ಹಾಕಿದರು. ಅವರು ವಸಾಹತುಶಾಹಿ ಮನಸ್ಥಿತಿಯಿಂದ ಹೊರಬರಬೇಕು ಎಂದು ಟೀಕಿಸಿದರು.
ಐಐಟಿಯಂತಹ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಅಥವಾ ಪ್ರಾದೇಶಿಕ ಭಾಷೆಗಳನ್ನು ಬೋಧನಾ ಮಾಧ್ಯಮವಾಗಿ ಬಳಸಬೇಕು. ಹಿಂದಿ ಭಾಷಿಕ ಪ್ರದೇಶದಲ್ಲಿ ಹಿಂದಿಯನ್ನೂ, ಇತರ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಯನ್ನೂ ಬಳಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಬಗೆಗಿನ ಸಂಸದೀಯ ಸಮಿತಿಯು ಶಿಫಾರಸು ಮಾಡಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯನ್, ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಕೆಗೆ ಐಚ್ಛಿಕ ಅವಕಾಶ ನೀಡಬೇಕೆಂದು ಹೇಳಿದ್ದರು. ಈ ವಿಷಯದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೂ ಅವರು ಒತ್ತಾಯಿಸಿದ್ದರು.
ಇಂಗ್ಲಿಷ್ ಬದಲಿಗೆ ಹಿಂದಿ ಭಾಷೆಯ ಬಳಕೆ ಉತ್ತೇಜನಕ್ಕೆ ಶಿಫಾರಸು ಮಾಡಲಾಗಿದೆಯೇ ಹೊರತು, ಕನ್ನಡ, ತೆಲುಗು, ತಮಿಳು, ಮರಾಠಿ ಸೇರಿದಂತೆ ಪ್ರಾದೇಶಿಕ ಭಾಷೆಗಳ ಬದಲಲ್ಲ ಎಂದು ರವಿ ಹೇಳಿದ್ದಾರೆ.
ಮಲಯಾಳಂ ಅಥವಾ ತಮಿಳು ಭಾಷೆಗಳ ಘನತೆ ಬಗ್ಗೆ ನಾಯಕರು ಪತ್ರ ಬರೆದರೆ ನಮ್ಮ ಪಕ್ಷ ಸ್ವಾಗತಿಸುತ್ತದೆ. ಆದರೆ, ಇಂಗ್ಲಿಷ್ ಪರವಾಗಿ ಪತ್ರ ಬರೆದರೆ ದು ಸರಿಯಲ್ಲ ಎಂದಿದ್ಧಾರೆ.
ಮಹಾತ್ಮ ಗಾಂಧಿ ಜವಹರಲಾಲ್ ನೆಹರೂ ಸಹ ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ಉತ್ತೇಜನವನ್ನು ಬೆಂಬಲಿಸಿದ್ದರು ಎಂದು ಸಿ.ಟಿ. ರವಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.