ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿ ನಬೀಸಾಬ್ ಅವರಿಗೆ ಸೇರಿದ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ‘ನಬೀಸಾಬ್ ಅವರಿಂದ ಹೇಳಿಕೆ ಪಡೆಯಲಾಗಿದೆ. ದಾಳಿ ನಡೆಸಿದ್ದಾರೆ ಎನ್ನಲಾದ 8 ರಿಂದ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದ್ದು, ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ’ ಎಂದು ಹೇಳಿದ್ದಾರೆ.
ಶ್ರೀರಾಮಸೇನೆ ಕಾರ್ಯಕರ್ತರ ಬಂಧನ
ಧಾರವಾಡ: ನುಗ್ಗಿಕೇರಿಯಲ್ಲಿ ಶನಿವಾರ ನಡೆದ ಮುಸ್ಲಿಮರಿಗೆ ಸೇರಿದ ಅಂಗಡಿಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಾಪಾರ ಮಾಡುತ್ತಿದ್ದ ನಬೀಸಾಬ್ ಗೌಸುಸಾಬ್ ಕಿಲ್ಲೇದಾರ, ಮೆಹಬೂಬ್ಸಾಬ್ ಮುಜಾವರ್, ಶರೀಫ್ ತಡಕೋಡ ಇವರ ಅಂಗಡಿಗಳನ್ನು 8ರಿಂದ 10 ಜನರಿದ್ದ ಗುಂಪು ದ್ವಂಸಗೊಳಿಸಿತ್ತು.
ಇದಕ್ಕೆ ಸಂಬಂಧಿಸಿದಂತೆ ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ (26) ಎಂಬುವವರನ್ನು ಗ್ರಾಮೀಣ ಠಾಣೆ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.