ಬೀದರ್: ಹಿಂದುಳಿದ ವರ್ಗದವರನ್ನು ತುಳಿಯುತ್ತಲೇ ಬಂದಿರುವ ಬಿಜೆಪಿ ಒಬಿಸಿ ಸಮಾವೇಶ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಸೋಮವಾರ ಇಲ್ಲಿ ಪ್ರಶ್ನಿಸಿದರು.
ಬಿಜೆಪಿ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತ ಬಂದಿದೆ. ಚುನಾವಣೆ ವೇಳೆ ಆ ಪಕ್ಷಕ್ಕೆ ಇದ್ದಕ್ಕಿದ್ದಂತೆ ಹಿಂದುಳಿದ ವರ್ಗದವರ ನೆನಪಾಗಿರುವುದು ಹಾಸ್ಯಾಸ್ಪದ. ಇದೊಂದು ಚುನಾವಣೆ ಗಿಮಿಕ್. ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್ ಹಿಂದುಳಿದ ವರ್ಗದವರಿಗೆ ಏನೂ ಮಾಡಿಲ್ಲ ಎನ್ನುತ್ತಿರುವ ಮುಖ್ಯಮಂತ್ರಿ ಅವರಿಗೆ ತಾಕತ್ತಿದ್ದರೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಗುತ್ತಿಗೆಯಲ್ಲಿ ₹ 50 ಲಕ್ಷದವರೆಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಸರ್ಕಾರ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಮಂಡಲ ಸಮಿತಿ ವಿರುದ್ಧ ಯಾತ್ರೆ ನಡೆಸಿದ್ದು ಬಿಜೆಪಿ. ರಾಹುಲ್ ಗಾಂಧಿ ಅವರ ಭಾರತ್ ಜೋಡಿ ಯಾತ್ರೆ ಬಿಜೆಪಿಯವರ ನಿದ್ದೆಗೆಡಿಸಿದೆ. ಕಾರಣ, ಮಾನಸಿಕ ಸ್ಥಿಮಿತ ಕಳೆದುಕೊಂಡು, ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕುರಿ ಸತ್ತರೆ ಪರಿಹಾರ ನೀಡುವ ಯೋಜನೆ ಜಾರಿಗೊಳಿಸಿದ್ದರು. ಆದರೆ, ಬಿಜೆಪಿ ಸರ್ಕಾರ ಅದನ್ನು ರದ್ದುಗೊಳಿಸಿತ್ತು. ಪಂಡಿತರಾವ್ ಚಿದ್ರಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾಗ ಹೋರಾಟದ ಮೂಲಕ ಯೋಜನೆ ಮರು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಿಸಿದ್ದೇವೆ ಎಂದು ಹೇಳುವ ಬಿಜೆಪಿಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಇದನ್ನು ಜಾರಿಗೆ ತರಲು ಸಾಧ್ಯವಿದೆಯೇ ಎಂದು ಪ್ರಶ್ನೆ ಹಾಕಿದರು.
ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗೀತಾ ಚಿದ್ರಿ, ಮುಖಂಡರಾದ ಮಾಳಪ್ಪ ಅಡಸಾರೆ, ಎಂ.ಎಸ್. ಕಟಗಿ, ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಹೇಡೆ, ಪಿ.ಎಸ್. ಇಟಕಂಪಳ್ಳಿ ಇದ್ದರು.