ಬೆಂಗಳೂರು: ಸ್ವಯಂ ಚಾಲಿನ ದರ ಸಂಗ್ರಹಣೆಗಾಗಿ ‘ಒಂದು ದೇಶ ಒಂದು ಕಾರ್ಡ್’ ಅನ್ನು ಬೆಂಗಳೂರು ಮೆಟ್ರೊ ರೈಲು ಮತ್ತು ಬಿಎಂಟಿಸಿಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು.
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿ ಅವರು ಈ ವಿಷಯ ತಿಳಿಸಿದರು.
ರಾಜ್ಯ ಸರ್ಕಾರ ಬೆಂಗಳೂರು ಮೆಟ್ರೊ ರೈಲು ನಿಗಮದ ವತಿಯಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. ಅಲ್ಲದೆ, ಹಂತ 2 ಮತ್ತು ಹಂತ 2 ಎ ಕಾಮಗಾರಿಗಳು ಪ್ರಗತಿಯಲ್ಲಿದ್ದು, 2022 ರೊಳಗೆ 75 ಕಿ.ಮೀ.ಗಳಷ್ಟು ಮೆಟ್ರೊ ಮಾರ್ಗವನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.
ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ₹15,767 ಕೋಟಿ ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳಿಗೆ ಸಂಬಂಧಿಸಿದ ನವ ನಗರೋತ್ಥಾನ ಕಾರ್ಯಕ್ರಮದಡಿ ₹1,060 ಕೋಟಿಗೆ ಅನುಮೋದನೆ ನೀಡಲಾಗಿದೆ. ಹೊಸದಾಗಿ ಸೇರಿದ 110 ಗ್ರಾಮಗಳಿಗೆ ಒಳಚರಂಡಿ ಸೌಲಭ್ಯ ಕಲ್ಪಿಸಲು ₹1,000 ಕೋಟಿ ನೀಡಲಾಗಿದೆ ಎಂದು ರಾಜ್ಯಪಾಲರು ವಿವರಿಸಿದರು.
ಬಿಬಿಎಂಪಿ ಅಧಿನಿಯಮವನ್ನು ಬೆಂಗಳೂರು ನಗರದ ಉತ್ತಮ ಆಡಳಿತಕ್ಕಾಗಿ ರಚಿಸಲಾಗಿದೆ. ಅಲ್ಲದೆ ನಗರದ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ಮಿಷನ್–2022 ಅನ್ನು ಪ್ರಾರಂಭಿಸಿದೆ. ಬೆಂಗಳೂರು ನಗರದಲ್ಲಿ ₹8,015 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
ಇದನ್ನೂ ಓದಿ:ಮೆಟ್ರೊ ರೈಲು– ಬಸ್ಗೆ ಒಂದೇ ಕಾರ್ಡ್?
ಭಾಷಣದ ಪ್ರಮುಖ ಅಂಶಗಳು
* ಸಾರಿಗೆ ಇಲಾಖೆಯು ₹4 ಕೋಟಿ ವೆಚ್ಚದಲ್ಲಿ ಬೆಸ್ಕಾಂ ಮೂಲಕ ಬೆಂಗಳೂರು ನಗರದಲ್ಲಿ 126 ಎಸಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪನೆ.
* ಬೆಂಗಳೂರಿನ 105 ಸ್ಮಾರಕಗಳ 3ಡಿ ಮ್ಯಾಪಿಂಗ್ ಹಾಗೂ ಲೇಸರ್ ಸ್ಕ್ಯಾನಿಂಗ್ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
* ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ₹25 ಕೋಟಿ ವೆಚ್ಚದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ
* ಮಡಿವಾಳದಲ್ಲಿ ₹30 ಕೋಟಿ ವೆಚ್ಚದಲ್ಲಿ ವಿಧಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದ ಸ್ಥಾಪನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.