ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಅನೈತಿಕ ರಾಜಕಾರಣದ ಅಸಲಿ ಅಪ್ಪ: ಮತ್ತೆ ಗುಡುಗಿದ ಕುಮಾರಸ್ವಾಮಿ

Last Updated 19 ಏಪ್ರಿಲ್ 2022, 12:28 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ನಾಯಕರ ಮಧ್ಯೆ ಪರಸ್ಪರ ವಾಗ್ದಾಳಿ, ಕೆಸರೆರಚಾಟ ಜೋರಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್ ಪೋಸ್ಟ್‌ ಪ್ರಕಟಿಸುವ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಫೋಸ್ಟ್‌ನಲ್ಲಿ ಏನಿದೆ?
ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ, ಕಲ್ಲಪ್ಪ ಹಂಡಿಬಾಗ್‌ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿಸದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ ಎಂದು ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹೇಳುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತ ವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓದಿ...ಗಲಭೆ ನಿಯಂತ್ರಿಸಲು ಪೊಲೀಸ್ ವಾಹನ ಹತ್ತಿದ್ದೆ, ಪ್ರಚೋದಿಸಲು ಅಲ್ಲ:ಅಲ್ತಾಫ್‌‌

ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲಿಯತ್ತುನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ ಎಂದು ವ್ಯಂಗ್ಯವಾಡಿದ್ದಾರೆ.

ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು? ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು, ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯ್ಯಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡೋರ ಮೇಲೆ ಸಿಡಿಸುವ ನಿಮ್ಮ ‘ಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದ್ದಾರೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ ಎಂದು ಎಚ್‌ಡಿಕೆ ಎಚ್ಚರಿಸಿದ್ದಾರೆ.

‘ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ!ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!’ ಎಂದು ಗುಡುಗಿದ್ದಾರೆ.

ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ? ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ ‘ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು’ ಎಂದು ನೀವು ಮಾಡಿದ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ‘ಬಿಜೆಪಿ ಬಾಲಂಗೋಚಿʼ ಮತ್ತು ‘ಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು! ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ಕೊನೆಗೆ 4 ಪ್ರಶ್ನೆ!
1. ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
2. ಆ ಪಾಪದ ಹಣವನ್ನು ಏನು ಮಾಡಿದಿರಿ?
3. ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
4. ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ?
ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ. #ವಿನಾಶಕಾಲೇವಿಪರೀತಸುಳ್ಳು #ಸತ್ಯಭಕ್ಷನಾಯಕಸುಳ್ಳಿನ_ಪ್ರಚಾರಕ ಎಂಬ ಹ್ಯಾಷ್‌ಟ್ಯಾಗ್ ಉಲ್ಲೇಖಿಸಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT