ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ(ಪಿಟಿಸಿಎಲ್) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಅಹೋರಾತ್ರಿ ಧರಣಿ ಆರಂಭಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂಮಿ ಬಲಾಢ್ಯರ ಪಾಲಾಗುವುದನ್ನು ತಪ್ಪಿಸಲು ಡಿ. ದೇವರಾಜ ಅರಸು ಮತ್ತು ಬಿ. ಬಸವಲಿಂಗಪ್ಪ ಅವರ ದಲಿತ ಪರ ಕಾಳಜಿಯಿಂದಾಗಿ ಈ ಕಾಯ್ದೆ 1978ರಲ್ಲಿ ಜಾರಿಗೆ ಬಂದಿತ್ತು. ಈ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯಗಳು ತಿರಸ್ಕರಿಸುತ್ತಿವೆ. ನ್ಯಾಯಾಲಯಗಳು ಅದೇ ರೀತಿ ತೀರ್ಪುಗಳನ್ನು ನೀಡುತ್ತಿವೆ. ಇದರಿಂದಾಗಿ ದಲಿತರು ಭೂಮಿ ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.
‘ವಿಧಾನ ಮಂಡಲ ಎಸ್ಸಿಎಸ್ಟಿ ಕಲ್ಯಾಣ ಸಮಿತಿ 2021ರ ಸೆಪ್ಟೆಂಬರ್ನಲ್ಲೇ ವರದಿ ಸಲ್ಲಿಸಿದೆ. ಪಿಟಿಸಿಎಲ್ ಕಾಯ್ದೆಯಡಿ ಭೂಮಿ ಮರು ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ಅನ್ವಯಿಸದಂತೆ ಕಾಯ್ದೆಗೆ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ವರದಿಯಲ್ಲಿ ಶಿಫಾರು ಮಾಡಿದೆ. ಆದರೂ, ಕಂದಾಯ ಸಚಿವ ಆರ್. ಅಶೋಕ್ ಅವರು ತಿದ್ದುಪಡಿಗೆ ಅಡ್ಡಿಪಡಿಸುತ್ತಿದ್ದಾರೆ. ಕೆಲವು ಮಂತ್ರಿಗಳು, ಶಾಸಕರು ಪರಿಶಿಷ್ಟರ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಖರೀದಿ ಮಾಡಿರುವುದರಿಂದ ಈ ಕಾಯ್ದೆ ಅನುಷ್ಠಾನಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ದೂರಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಕಾಯ್ದೆ ತಿದ್ದುಪಡಿ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು. ಪ್ರತಿ ಭಾರಿಯೂ ಇದೇ ರೀತಿ ಭರವಸೆ ನೀಡಲಾಗುತ್ತಿದ್ದು, ಇದರಿಂದ ಪ್ರಯೋಜನ ಇಲ್ಲ. ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತರುವ ತನಕ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಮಳೆಯ ನಡುವೆಯೂ ಅಹೋರಾತ್ರಿ ಧರಣಿ ಮುಂದುವರಿದಿದೆ.
ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಪ್ರಜಾ ಪರಿವರ್ತನಾ ವೇದಿಕೆ ಅಧ್ಯಕ್ಷ ಬಿ.ಗೋಪಾಲ್, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಪಿಟಿಸಿಎಲ್ ಸಂರಕ್ಷಣಾ ಹೋರಾಟ ಸಮಿತಿಯ ಶಾಂತಕುಮಾರ್, ಮಂಜುನಾಥ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.