ಗುಣಾತ್ಮಕ ಆಡಳಿತಕ್ಕೆ ಎಸ್.ಎಂ. ಕೃಷ್ಣ ಮಾದರಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜನಪರ ಮತ್ತು ಗುಣಾತ್ಮಕ ಆಡಳಿತಕ್ಕೆ ಎಸ್.ಎಂ. ಕೃಷ್ಣ ಮಾದರಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಅಭಿನಂದಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಉದ್ಯಮಗಳ ಬೆಳವಣಿಗೆ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿ, ರೈತರಿಗಾಗಿ ಯಶಸ್ವಿನಿ ಆರೋಗ್ಯ ವಿಮೆಯಂತಹ ಯೋಜನೆಗಳನ್ನು ಜಾರಿಗೊಳಿಸಿದ ಕೃಷ್ಣ ಅವರು, ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದವರು. ಅವರನ್ನು ಕೇಂದ್ರ ಸರ್ಕಾರ ಗುರುತಿಸಿರುವುದು ಸಂತೋಷದ ಸಂಗತಿ’ ಎಂದರು.
ಕೃಷ್ಣ ಅವರ ಸಾರ್ವಜನಿಕ ಜೀವನ ಎಲ್ಲರಿಗೂ ಮಾದರಿಯಾದುದು. ಕನ್ನಡ ಮತ್ತು ಕರ್ನಾಟಕಕ್ಕಾಗಿ ಅವರು ಅನೇಕ ಸವಾಲುಗಳನ್ನು ಎದುರಿಸಿದ್ದರು. ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಉದ್ದಿಮೆಗಳು ಬೆಳೆದು ನಿಲ್ಲಲು ಅವರು ಪ್ರಮುಖ ಕಾರಣ ಎಂದು ಹೇಳಿದರು.
ಕೃಷ್ಣ ಅವರಿಗೆ ಬೊಮ್ಮಾಯಿ ಅವರು ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು. ಸಚಿವರಾದ ಆರ್. ಅಶೋಕ ಮತ್ತು ಡಾ.ಕೆ. ಸುಧಾಕರ್ ಜತೆಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.