ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಕೇಂದ್ರದ ಒಬಿಸಿ ಸೌಲಭ್ಯ ಸಿಗುವವರೆಗೆ ಹೋರಾಟ ನಿಲ್ಲದು. ಬೆಳಗಾವಿ ಅಧಿವೇಶನದ ಒಳಗಾಗಿ ಸರ್ಕಾರ ನಿರ್ಧಾರ ಪ್ರಕಟಿಸಲೇಬೇಕು’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಒತ್ತಾಯಿಸಿದರು.
ಪಟ್ಟಣದಲ್ಲಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನಜಾಗೃತಿ ಸಮಾವೇಶ ಮತ್ತು ವೀರರಾಣಿ ಕಿತ್ತೂರು ಚನ್ನಮ್ಮಾಜಿ 199ನೇ ವಿಜಯೋತ್ಸವ, 244ನೇ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಮೀಸಲಾತಿ ಪಡೆಯುವುದು ನಮ್ಮೆಲ್ಲರ ಹಕ್ಕು. ಪ್ರಾಣ ಬಿಟ್ಟೇವು, ಮೀಸಲಾತಿ ಬಿಡೆವು. ಮೀಸಲಾತಿ ಸೌಲಭ್ಯವಿಲ್ಲದೆ ಪಂಚಮಸಾಲಿ ಸಮಾಜದ ಮಕ್ಕಳು ಉನ್ನತ ಹುದ್ದೆಗಳಿಂದ ವಂಚಿತರಾಗುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ರೀತಿಯ ಹೊಂದಾಣಿಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
ಸಚಿವ ಮುರಗೇಶ ನಿರಾಣಿ ಮಾತನಾಡಿ, ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದರಲ್ಲಿ ಯಾವುದೇ ಸಂಶಯ ಇಲ್ಲ. ಸಮಾಜ ಬಾಂಧವರು ಅಪನಂಬಿಕೆ ಇಟ್ಟುಕೊಳ್ಳಬಾರದು‘ ಎಂದು ಕೋರಿದರು
ಸಚಿವರಾದ ಸಿ.ಸಿ.ಪಾಟೀಲ, ಶಂಕರ್ ಪಾಟೀಲ ಮುನೇನಕೊಪ್ಪ, ಸಂಸದ ಸಂಗಣ್ಣ ಕರಡಿ ಸಮಾವೇಶಕ್ಕೆ ಗೈರಾಗಿದ್ದರು.