ಬೆಂಗಳೂರು: ಪಂಚಾಯತ್ ರಾಜ್ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಉತ್ತಮಪಡಿಸಲು ಹಾಗೂ ಒಳ್ಳೆಯ ಕೆಲಸ ಮಾಡಿದವರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ನೀಡುವ ನಾಲ್ಕು ಪ್ರಶಸ್ತಿಗಳನ್ನು ರಾಜ್ಯದ ಹಲವು ಗ್ರಾಮೀಣ ಸಂಸ್ಥೆಗಳು ಪಡೆದುಕೊಂಡಿವೆ.
ಪಂಚಾಯತ್ ರಾಜ್ ದಿವಸ್ ಆಚರಣೆ ಅಂಗವಾಗಿ ಶನಿವಾರ ವರ್ಚುವಲ್ ರೂಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಶಸ್ತಿಯನ್ನು ಘೋಷಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವರ್ಚುವಲ್ ರೂಪದಲ್ಲಿ ಭಾಗವಹಿಸಿದ್ದರು.
ದೀನ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 466 ಪಂಚಾಯಿತಿ , 42 ತಾಲ್ಲೂಕು ಪಂಚಾಯತ್ ಹಾಗೂ 17 ಜಿಲ್ಲಾ ಪಂಚಾಯಿತಿಗಳು ಭಾಗವಹಿಸಿದ್ದವು. ನಾನಾಜಿ ದೇಶಮುಖ್ ರಾಷ್ಟ್ರೀಯ ಗೌರವ್ ಗ್ರಾಮಸಭಾ ಪುರಸ್ಕಾರಕ್ಕೆ 188 ಹಾಗೂ ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರಕ್ಕೆ 378 ಗ್ರಾಮ ಪಂಚಾಯಿತಿಗಳು ಭಾಗವಹಿಸಿದ್ದವು. ಇವುಗಳಲ್ಲಿ ಪರಿಶೀಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ದೀನ ದಯಾಳ್ ಪುರಸ್ಕಾರ: ಹಾಸನ ಜಿಲ್ಲಾ ಪಂಚಾಯಿತಿ, ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯಿತಿ, ಪಾಂಡವಪುರ ತಾಲ್ಲೂಕು ಪಂಚಾಯಿತಿ, ತುಮ್ಮಿನ ಕಟ್ಟಿ, ಯಡಗನಹಳ್ಳಿ ಹಾಗೂ ಕರ್ಣಕುಪ್ಪೆ ಗ್ರಾಮ ಪಂಚಾಯಿತಿ.