ಬೆಂಗಳೂರು: ರಾಜ್ಯದಾದ್ಯಂತ ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮಂಗಳವಾರದಿಂದ (ಸೆ. 1) ಮದ್ಯ ಸೇವನೆಗೆ ಅವಕಾಶ ನೀಡಿ ಅಬಕಾರಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಈ ಎಲ್ಲ ಕಡೆಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಕಲ್ಪಿಸಿ ಆಹಾರದೊಂದಿಗೆ ಮದ್ಯ, ಬಿಯರ್, ವೈನ್ ಸೇವನೆಗೆ ಅನುಮತಿ ನೀಡಲಾಗಿದೆ. ಮದ್ಯ, ಬಿಯರ್, ವೈನ್ ಪಾರ್ಸೆಲ್ ತೆಗೆದುಕೊಂಡು ಹೋಗಲು ಈ ಹಿಂದೆ ನೀಡಿದ್ದ ಅನುಮತಿಯನ್ನು ವಾಪಸು ಪಡೆಯಲಾಗಿದೆ ಎಂದು ಅಬಕಾರಿ ಆಯುಕ್ತ ಎಂ. ಲೋಕೇಶ್ ಆದೇಶದಲ್ಲಿ ತಿಳಿಸಿದ್ದಾರೆ.
‘ಕೇಂದ್ರ ಸರ್ಕಾರ ಹೊರಡಿಸಿರುವ ಮಾದರಿ ಕಾರ್ಯವಿಧಾನಗಳನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಸನ್ನದಿನ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಅಬಕಾರಿ ಸನ್ನದುಗಳಲ್ಲಿ ಮದ್ಯವನ್ನು ಸೀಲ್ಡ್ ಬಾಟಲಿಯಲ್ಲಿ ಎಂಆರ್ಪಿ ದರದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಸ್ಸಾಂ, ಪಂಜಾಬ್, ಹರಿಯಾಣ, ರಾಜಸ್ಥಾನ ರಾಜ್ಯಗಳು ಮದ್ಯದೊಂದಿಗೆ ಆಹಾರ ಸೇವನೆಗೆ ಅವಕಾಶ ನೀಡಿವೆ. ಕೇಂದ್ರ ಸರ್ಕಾರ ಹೊರಡಿಸಿರುವ ಮಾದರಿ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ರಾಜ್ಯದಲ್ಲೂ ಅನುಮತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.