ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಇದರ ಬೆನ್ನಲ್ಲೇ ಪೊಲೀಸ್ ನೇಮಕಾತಿ ವಿಭಾಗದ 12 ಸಿಬ್ಬಂದಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಈ ಹಿಂದೆಯೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಇದೀಗ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ, ವಿಭಾಗದ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಖಾಲಿಯಾದ ಹುದ್ದೆಗಳಿಗೆ ಹೊಸ ಸಿಬ್ಬಂದಿ ನಿಯೋಜನೆ ಆಗಬೇಕಿದೆ.
‘ನೇಮಕಾತಿ ವಿಭಾಗದಲ್ಲಿ 17 ಸಿಬ್ಬಂದಿ ಇದ್ದರು. ಅದರಲ್ಲಿ 12 ಸಿಬ್ಬಂದಿ ವರ್ಗಾವಣೆ ಮಾಡಲಾಗಿದ್ದು, 5 ಸಿಬ್ಬಂದಿ ಉಳಿದಿದ್ದಾರೆ’ ಎಂದು ಮೂಲಗಳು ಹೇಳಿವೆ.
ಪೊಲೀಸ್ ನೇಮಕಾತಿ ವಿಭಾಗದಿಂದಲೇ ಪಿಎಸ್ಐ ನೇಮಕ ಪ್ರಕ್ರಿಯೆ ನಡೆಸಲಾಗಿತ್ತು. ಇದೇ ನೇಮಕದಲ್ಲಿ ಅಕ್ರಮ ನುಸುಳಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೂ ಸಿಐಡಿಗೆ ಅನುಮಾನವಿದೆ.