ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ಪ್ರಕಾಶ ಖಂಡ್ರೆ

Last Updated 11 ಏಪ್ರಿಲ್ 2021, 11:35 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಕಳೆದ ವಿಧಾನಸಭಾ ಚುನಾವಣೆಯ ನಂತರ ರಾಜಕೀಯದಿಂದ ದೂರ ಉಳಿದಿದ್ದ ಭಾಲ್ಕಿಯ ಮಾಜಿ ಶಾಸಕ ಪ್ರಕಾಶ ಖಂಡ್ರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣಸಿಂಗ್‌ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಸೇರಿದ್ದಾರೆ.

ಬಸವಕಲ್ಯಾಣದಲ್ಲಿ ಭಾನುವಾರ ನಡೆದ ಉಪ ಚುನಾವಣೆಯ ಪ್ರಚಾರ ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪ್ರಕಾಶ ಖಂಡ್ರೆ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ‌ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಶೈಲೇಂದ್ರ ಬೆಲ್ದಾಳೆ ಜಿಲ್ಲೆಯ ಪ್ರಮುಖ ನಾಯಕರು ಇದ್ದರು.

ಪ್ರಕಾಶ ಖಂಡ್ರೆ 1999ರಿಂದ 2018ರ ವರೆಗೆ ಬಿಜೆಪಿಯಲ್ಲಿ ಇದ್ದರು. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

2008, 2013ರಲ್ಲಿ ಭಾಲ್ಕಿ ಮತ್ತು 2016ರಲ್ಲಿ ಬೀದರ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. 2018ರಲ್ಲಿ ಬಿಜೆಪಿ ಟಿಕೆಟ್ ದೊರೆಯದ ಕಾರಣ ಮುನಿಸಿಕೊಂಡು ಜೆಡಿಎಸ್‌ ಸೇರಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ಮೂರು ವರ್ಷಗಳ ಬಳಿಕ ಮತ್ತೆ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದಾರೆ. ಉಪ ಚುನಾವಣೆ ಸಂದರ್ಭದಲ್ಲೇ ಪ್ರಕಾಶ ಖಂಡ್ರೆ ಅವರು ಜೆಡಿಎಸ್ ತೊರೆದು ಮತ್ತೆ ಬಜೆಪಿ ಸೇರಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ.

ಮನವೊಲಿಕೆಗೆ ಕುಮಾರಸ್ವಾಮಿ ಯತ್ನ

ಪ್ರಕಾಶ ಖಂಡ್ರೆ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಲಿರುವ ವಿಷಯ ತಿಳಿದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಎರಡು ದಿನಗಳ ಹಿಂದೆ ಪ್ರಕಾಶ ಖಂಡ್ರೆ ಅವರನ್ನು ಶಾಸಕ ಬಂಡೆಪ್ಪ ಕಾಶೆಂಪೂರ್‌ ಅವರ ನಿವಾಸಕ್ಕೆ ಕರೆದು ಮಾತುಕತೆ ನಡೆಸಿದ್ದರು. ಕುಮಾರಸ್ವಾಮಿ ಅವರು ಪಕ್ಷ ಬಿಡದಂತೆ ಮನವಿ ಮಾಡಿದರೂ ಗಟ್ಟಿ ನಿರ್ಧಾರ ಕೈಗೊಂಡು ಮತ್ತೆ ಬಿಜೆಪಿಗೆ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT