ಮೈಸೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಮಾರ್ಚ್ 12) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಮತ್ತು ಧಾರವಾಡ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 11.10ಕ್ಕೆ ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅವರು ಹೆಲಿಕಾಪ್ಟರ್ನಲ್ಲಿ ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ. ಬೆಂಗಳೂರು– ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಿ, ಮಂಡ್ಯ ನಗರದಲ್ಲಿ 1.8 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ.
ನಂತರ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜತೆಗೆ ಕೆಲವು ಕಾಮಗಾರಿಗಳಿಗೆ ಶಿಲಾನ್ಯಾಸವನ್ನೂ ನೆರವೇರಿಸಲಿದ್ದಾರೆ. ಬಳಿಕ ಮಂಡ್ಯದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಹೆಲಿಪ್ಯಾಡ್ನಿಂದ ಮೈಸೂರು ವಿಮಾನನಿಲ್ದಾಣಕ್ಕೆ ಬಂದು, ಅಲ್ಲಿಂದ ಮಧ್ಯಾಹ್ನ 1.40ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಮಧ್ಯಾಹ್ನ 2.45ಕ್ಕೆ ಹುಬ್ಬಳ್ಳಿ ತಲುಪಲಿರುವ ಮೋದಿ, ಹೆಲಿಕಾಪ್ಟರ್ ಮೂಲಕ ಧಾರವಾಡದ ಚಿಕ್ಕಮಲ್ಲಿಗ ವಾಡದಲ್ಲಿರುವ ‘ಐಐಟಿ ಧಾರವಾಡ’ದ ನೂತನ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ಸಂಜೆ 4ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಐಐಟಿ ಧಾರವಾಡ’ದ ಕ್ಯಾಂಪಸ್, ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಅತಿ ಉದ್ದನೆಯ ಪ್ಲಾಟ್ಫಾರ್ಮ್ ಉದ್ಘಾಟಿಸಲಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಗೆ ಶಂಕುಸ್ಥಾಪನೆ ಹಾಗೂ ವಿವಿಧ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 5ಕ್ಕೆ ದೆಹಲಿಗೆ ನಿರ್ಗಮಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.