ಬೆಂಗಳೂರು: ‘ಬಿಟ್ಕಾಯಿನ್ ಹಗರಣ ಮುಗಿದುಹೋದ ಕತೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಕೇಂದ್ರ ಸರ್ಕಾರ ಮಾಹಿತಿ ಸಂಗ್ರಹಿಸುತ್ತಿರುವಾಗಲೇ ಗೃಹ ಸಚಿವರು ಹೀಗೆ ಹೇಳಿಕೆ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ’ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರಕರಣ ಮುಗಿದು ಹೋಗಿದ್ದರೆ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಏಕೆ ಮಾಹಿತಿ ಪಡೆಯಬೇಕಿತ್ತು? ಇಂಟರ್ಪೋಲ್ಗೂ ಮಾಹಿತಿ ಕೊಡಲಾಗಿದೆ. ಪೊಲೀಸರು ಆಗಾಗ ಪತ್ರಿಕಾ ಹೇಳಿಕೆ ನೀಡುತ್ತಿದ್ದಾರೆ. ಹೀಗೆಲ್ಲ ಇದ್ದರೂ ಪ್ರಕರಣ ಮುಗಿಯುವುದು ಹೇಗೆ’ ಎಂದು ಕೇಳಿದರು.
‘ಬಿಟ್ಕಾಯಿನ್ ಹ್ಯಾಕಿಂಗ್ ಹಗರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಸತ್ಯ ಹೊರಕ್ಕೆ ತರುವ ಪ್ರಯತ್ನ ನಡೆಯುತ್ತಿಲ್ಲ. ಸರ್ಕಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಮತ್ತು ಅಧಿಕಾರಿಗಳನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಬೇಜವಾಬ್ದಾರಿ ಗೃಹ ಸಚಿವರನ್ನು ನಾನು ಎಂದೂ ನೋಡಿರಲಿಲ್ಲ’ ಎಂದರು.
ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡ 40ರಷ್ಟು ಲಂಚ ಪಡೆಯಲಾಗುತ್ತಿದೆ ಎಂಬುದು ಗುತ್ತಿಗೆದಾರರ ಸಂಘದ ಆರೋಪ. ಬಿಜೆಪಿ ಶಾಸಕರಾದ ಸಿ.ಪಿ. ಯೋಗೇಶ್ವರ್, ಬಸನಗೌಡ ಪಾಟೀಲ ಯತ್ನಾಳ ಕೂಡ ಆರೋಪ ಮಾಡಿದ್ದರು. ಸಚಿವ ಕೆ.ಎಸ್. ಈಶ್ವರಪ್ಪ ಕೂಡ ರಾಜ್ಯಪಾಲರಿಗೆ ದೂರು ನೀಡಿದ್ದರು ಎಂದು ಹೇಳಿದರು.