‘ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿ ಅಧಿಸೂಚನೆ ಪ್ರಕಟಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಜನ ಸೈನ್ಯ ಸಂಘಟನೆಯ ಕಾರ್ಯಕರ್ತರು ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಸೋಮವಾರ ಟೈರ್ ಸುಟ್ಟು ಪ್ರತಿಭಟಿಸಿದರು.
‘ಒಂದೂವರೆ ವರ್ಷದಿಂದ ನಿರಂತರವಾಗಿ ರಸ್ತೆಗಿಳಿದು ಹೋರಾಟಗಳನ್ನು ಮಾಡುತ್ತಿದ್ದರೂ ಲೆಕ್ಕಿಸದೇ, ಹೋರಾಟಗಾರರ ಆಗ್ರಹಕ್ಕೆ ಕಿಮ್ಮತ್ತು ಕೊಡದೇ ವಿಜಯನಗರ ಜಿಲ್ಲೆಯ ಆದೇಶವನ್ನು ಹೊರಡಿಸಿ ರಾಜ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ’ ಎಂದು ಮುಖಂಡ ಕೆ.ಎರ್ರಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲೆಯ ಸಮಸ್ತ ಜನರ ಪರವಾಗಿ ಫೆ.5ರಂದು ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇದ್ದು ನ್ಯಾಯ ಸಿಗುವ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ವಿಜಯನಗರ ಜಿಲ್ಲೆಯ ಅಧಿಕೃತ ಆದೇಶವನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿನ ಅಗು-ಹೋಗುಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ’ ಎಂದು ಎಚ್ಚರಿಸಿದರು.
ಸಂಘಟನೆಯ ಉತ್ತರ ಕರ್ನಾಟಕ ಘಟಕದ ಉಪಾಧ್ಯಕ್ಷ ಫಯಾಜ್ ಭಾಷ, ನಗರ ಘಟಕದ ಉಪಾಧ್ಯಕ್ಷ ಗೋವಿಂದು, ನಾಸೀರ್ ಪಾಲ್ಗೊಂಡಿದ್ದರು.