ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಪರ ಮತ: ಜೆಡಿಎಸ್ ವಿರುದ್ಧ ಹೋರಾಟ, ಸೆರೆ

ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ಮತ್ತು ಇದಕ್ಕೆ ಕಾರಣವಾದ ಜೆಡಿಎಸ್ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ನೂರಾರು ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.
ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಪ್ರಕಾಶ್ ಕಮ್ಮರಡಿ, ಗಾಯತ್ರಿ ಸೇರಿ ಹಲವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಉಳಿದ ರೈತರು ಮೌರ್ಯ ವೃತ್ತದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.
ಗಾಂಧಿ ಪ್ರತಿಮೆ ಎದುರು ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು, ವಿಧಾನ ಪರಿಷತ್ನಲ್ಲಿ ಮಸೂದೆ ಪರ ಜೆಡಿಎಸ್ ಸದಸ್ಯರು ಮತ ಹಾಕಿದ ಸುದ್ದಿ ತಿಳಿಯುತ್ತಿದ್ದಂತೆ ಏಕಾಏಕಿ ರಸ್ತೆಗಿಳಿದು ಹೋರಾಟ ಆರಂಭಿಸಿದರು.
‘ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್ ಬಂಡವಾಳಶಾಹಿಗಳ ಪರವಾಗಿ ಬಿಜೆಪಿ ಮುಂದಾಗಿದೆ. ಇವರ ಜೊತೆಗೆ ಜೆಡಿಎಸ್ ಕೂಡ ಶಾಮೀಲಾಗಿ ಮಸೂದೆ ಪರ ಮತ ಹಾಕಿದೆ’ ಎಂದು ಕಿಡಿ ಕಾರಿದರು.
ಮಸೂದೆ ವಿರೋಧಿಸಿ ಈ ಹಿಂದೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕಾರ ಆಗದಂತೆ ಕಾಂಗ್ರೆಸ್ ಜತೆ ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಮಾತಿಗೆ ತಪ್ಪಿದ ಜೆಡಿಎಸ್ ಈಗ ಬಿಜೆಪಿ ಪರ ನಿಂತಿದೆ. ರೈತರ ಪರ ಎಂದು ಹೇಳಿಕೊಳ್ಳುಲು ಆ ಪಕ್ಷಕ್ಕೆ ಈಗ ಯಾವುದೇ ನೈತಿಕತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.