ಬೆಂಗಳೂರು: ‘ಅರಣ್ಯ ಇಲಾಖೆ ತನ್ನ ವಶದಲ್ಲಿರುವ ಆರು ಲಕ್ಷ ಹೆಕ್ಟೇರ್ ಡೀಮ್ಡ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಿದ್ದು, ಈ ಭೂಮಿಯಲ್ಲಿ ಅಗತ್ಯ ಇರುವಷ್ಟನ್ನು ಸರ್ಕಾರದ ಬಳಿಯೇ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ ಹಂಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಆ ಮೂಲಕ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆಯಲ್ಲಿರುವ ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಮುಕ್ತಿಕೊಡಿಸಲು ಸರ್ಕಾರ ಮುಂದಾಗಿದೆ.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ, ‘ಅರಣ್ಯ ಇಲಾಖೆಯ ವಶದಲ್ಲಿರುವ ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಅರಣ್ಯ ಪ್ರದೇಶವೆಂದು ಗುರುತಿಸಲಾಗಿದೆ. ಈ ಭೂಮಿ ಕಂದಾಯ ಇಲಾಖೆಗೆ ಸೇರಿದೆ’ ಎಂದರು.
‘ಕಂದಾಯ ಇಲಾಖೆಗೆ ಬರಲಿರುವ ಭೂಮಿಯ ಪೈಕಿ, ಆಸ್ಪತ್ರೆ ನಿರ್ಮಾಣ ಸೇರಿದಂತೆ ನಾಗರಿಕ ಅಗತ್ಯಗಳಿಗೆ ಎಷ್ಟು ಪ್ರಮಾಣದ ಭೂಮಿ ಅಗತ್ಯವಿದೆ ಎಂದು ಗುರುತಿಸಲಾಗುವುದು. ಐದು ಲಕ್ಷ ಹೆಕ್ಟೇರ್ನಷ್ಟು ಭೂಮಿಯನ್ನು ರೈತರಿಗೆ ಹಂಚಲಾಗುವುದು’ ಎಂದರು.
‘ಕೊಡಗು ಜಿಲ್ಲೆಯಲ್ಲಿ 12 ಸಾವಿರ, ಹಾಸನದಲ್ಲಿ 30 ಸಾವಿರ, ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ. ಈ ಭೂಮಿಯಲ್ಲಿ ಕಾಫಿ, ಏಲಕ್ಕಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. ಈ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಒತ್ತುವರಿದಾರರಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಪೈಕಿಶೇ 80ರಷ್ಟು ಮಂದಿ ಐದು ಎಕರೆಗಿಂತಲೂ ಕಡಿಮೆ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.
‘ಒತ್ತುವರಿ ಮಾಡಿಕೊಂಡವರುಸರ್ಕಾರಕ್ಕೆ ಹಣ ಪಾವತಿಸದೆ ಹಲವು ವರ್ಷಗಳಿಂದ ಭೂಮಿಯನ್ನು ಅನುಭವಿಸುತ್ತಿದ್ದರು. ಇನ್ನು ಮುಂದೆ ಅವರು ಗುತ್ತಿಗೆ ಹಣ ಪಾವತಿಸಬೇಕಾಗುತ್ತದೆ. ಆ ಮೂಲಕ, ಒತ್ತುವರಿ ಜಮೀನು ಸರ್ಕಾರಕ್ಕೆ ಸೇರಿದ್ದು ಎಂದು ದಾಖಲೆಗಳಲ್ಲಿ ಗುರುತಿಸಲಾಗುತ್ತದೆ. ಇದೇ ರೀತಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒತ್ತುವರಿಯಾಗಿರುವ ಗೇರು ಭೂಮಿಯನ್ನು ಕೂಡಾ ಗುತ್ತಿಗೆ ನೀಡಲು ನಿರ್ಧರಿಸಲಾಗಿದೆ’ ಎಂದು ಅವರು ವಿವರಿಸಿದರು.