ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಸಂಗೀತಾ ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ನಟಿಯರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ವಾದ– ಪ್ರತಿವಾದ ಆಲಿಸಿದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ತಿರಸ್ಕರಿಸಿ ಸೋಮವಾರ ಆದೇಶ ಹೊರಡಿಸಿದೆ.
ನಟಿಯರ ಜೊತೆಯಲ್ಲಿ ಇನ್ನೊಬ್ಬ ಆರೋಪಿ ರಾಹುಲ್ ತೋನ್ಸೆಜಾಮೀನು ಅರ್ಜಿ ಸಹ ತಿರಸ್ಕೃತಗೊಂಡಿದೆ. ಈ ಆದೇಶವನ್ನು ಪ್ರಶ್ನಿಸಿ ಆರೋಪಿಗಳು, ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಎಲ್ಲರೂ ಜೈಲಿನಲ್ಲೇ ಇರಲಿದ್ದಾರೆ.
ಪೆಡ್ಲರ್ ಜೊತೆ ಸಂಪರ್ಕ; ‘ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡು ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪ ಸಂಗೀತಾ ಮೇಲಿದೆ. ಸದಾಶಿವನಗರದಲ್ಲಿರುವ ಅಪಾರ್ಟ್ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್ನಲ್ಲಿ ಸಂಗೀತಾ ಇದ್ದರು. ದಾಳಿ ಮಾಡಿ ಅವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಸಂಗೀತಾ ವಿಚಾರಣೆ ನಡೆಯುತ್ತಿದೆ. ಮುತ್ತಪ್ಪ ರೈ ನಿಧನರಾಗುವುದಕ್ಕೆ ಮುನ್ನ ಅವರ ಜತೆಗೂ ಸಂಗೀತಾ ಗುರುತಿಸಿಕೊಂಡಿದ್ದರು. ಮುಂಬೈನಲ್ಲಿದ್ದ ಕೆಲ ಪೆಡ್ಲರ್ಗಳ ಜೊತೆಯಲ್ಲಿ ಒಡನಾಟ ಇಟ್ಟುಕೊಂಡಿದ್ದರು ಎಂಬ ಮಾಹಿತಿ ಸಿಸಿಬಿಗೆ ಸಿಕ್ಕಿದೆ.