ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಯಾ ಚಕ್ರವರ್ತಿ ಪ್ರಕರಣಕ್ಕೆ ಹೋಲಿಸಲಾಗದು

ರಾಗಿಣಿ, ಸಂಜನಾ ಜಾಮೀನು ಅರ್ಜಿ ಆದೇಶದಲ್ಲಿ ಹೈಕೋರ್ಟ್‌
Last Updated 4 ನವೆಂಬರ್ 2020, 19:17 IST
ಅಕ್ಷರ ಗಾತ್ರ

ಬೆಂಗಳೂರು: ‘ಡ್ರಗ್ಸ್‌ ಪೂರೈಕೆ ಜಾಲದಲ್ಲಿ ಸಕ್ರಿಯರಾಗಿದ್ದ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಪ್ರಕರಣವನ್ನು ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಪ್ರಕರಣಕ್ಕೆ ಹೋಲಿಕೆ ಮಾಡಿ ಜಾಮೀನು ಮಂಜೂರು ಮಾಡಲಾಗದು’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಪ್ರಕರಣ ಹಾಗೂ ರಿಯಾ ಚಕ್ರವರ್ತಿ ಪ್ರಕರಣಗಳಲ್ಲಿ ಭಿನ್ನತೆ ಇದೆ ಎಂದು ನ್ಯಾಯಮೂರ್ತಿ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರು ಮಂಗಳವಾರ ಇಬ್ಬರು ನಟಿಯರ ಜಾಮೀನು ಅರ್ಜಿ ತಿರಸ್ಕರಿಸಿರುವ ಆದೇಶದಲ್ಲಿ ಹೇಳಿದ್ದಾರೆ.

ಸಣ್ಣ ಪ್ರಮಾಣದ ಮತ್ತು ಸ್ವಂತ ಬಳಕೆಯ ಉದ್ದೇಶಕ್ಕೆ ಇರಿಸಿಕೊಂಡ ಮಾದಕವಸ್ತುಗಳನ್ನು ವಶಪಡಿಸಿಕೊಂಡ ಎಲ್ಲ ಸಂದರ್ಭಗಳಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ. ಅದೇ ಕಾರಣದಿಂದ ಮುಂಬೈ ಹೈಕೋರ್ಟ್‌ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರು ಮಾಡಿದೆ. ಅದರ ಆಧಾರದಲ್ಲೇ ರಾಗಿಣಿ ಮತ್ತು ಸಂಜನಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಅವರ ಪರ ವಕೀಲರು ವಾದಿಸಿದ್ದರು.

‘ರಿಯಾ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಲಾಗಿದೆ ಎಂಬುದನ್ನು ಅಲ್ಲಗಳೆಯಲಾಗದು. ಆದರೆ, ವಾಸ್ತವಿಕ ಸಂಗತಿಗಳ ಆಧಾರದಲ್ಲಿ ನ್ಯಾಯಾಲಯ ತೀರ್ಮಾನ ಕೈಗೊಂಡಿದೆ. ಮಾದಕವಸ್ತು ನಿಯಂತ್ರಣ ಕಾಯ್ದೆಯ ಸೆಕ್ಷನ್ 27(ಎ) ಅಡಿಯಲ್ಲಿ ಕ್ರಮ ಜರುಗಿಸುವಾಗ ವಶಕ್ಕೆ ಪಡೆದ ಮಾದಕವಸ್ತುವಿನ ಪ್ರಮಾಣವನ್ನು ಮಾತ್ರ ಆಧರಿಸಿ ತೀರ್ಮಾನಕ್ಕೆ ಬರುವುದಿಲ್ಲ’ ಎಂದು ನ್ಯಾಯಾಲಯ ಹೇಳಿದೆ.

‘ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಲ್ಲಿಸಿರುವ ‘ಕೇಸ್‌ ಡೈರಿ’ಯನ್ನು ಪರಿಶೀಲಿಸಲಾಗಿದೆ. ತನಿಖಾಧಿಕಾರಿಯು ಸಂಗ್ರಹಿಸಿರುವ ಸಾಕ್ಷ್ಯಗಳನ್ನು ಗಮನಿಸಿದರೆ ಆರೋಪಿಗಳ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳು ಸಾಧ್ಯವೇ ಇಲ್ಲ. ಕೆಲವು ಆರೋಪಿಗಳು ನಿರಂತರವಾಗಿ ಡ್ರಗ್ಸ್ ಪೆಡ್ಲರ್‌ಗಳ ಜತೆ ಸಂಪರ್ಕದಲ್ಲಿದ್ದರು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಮೂತ್ರ ಪರೀಕ್ಷೆಗೆ ಮಾದರಿ ಸಂಗ್ರಹಿಸುವ ಸಂದರ್ಭದಲ್ಲಿ ರಾಗಿಣಿ ಮೂತ್ರದ ಬದಲಿಗೆ ನೀರು ತುಂಬಿಸಿ ಕೊಟ್ಟಿದ್ದರು ಎಂದು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ತಿಳಿಸಿದ್ದಾರೆ. ಅದು ನಿಜವೇ ಆಗಿದ್ದಲ್ಲಿ, ಅವರು ತನಿಖೆಯನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತದೆ’ ಎಂದು ನ್ಯಾ. ಶ್ರೀನಿವಾಸ್‌ ಹರೀಶ್‌ ಕುಮಾರ್‌ ಹೇಳಿದ್ದಾರೆ.

‘ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುವಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿರೀಕ್ಷಣಾ ಜಾಮೀನು ಕೋರಿದರೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಮಾಜದ ಹಿತ ಎರಡನ್ನೂ ಕಣ್ಣ ಮುಂದೆ ಇರಿಸಿಕೊಂಡು ತೀರ್ಮಾನಕ್ಕೆ ಬರಬೇಕಾಗುತ್ತದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಾದಕವಸ್ತುಗಳ ಬಳಕೆಯ ವ್ಯಸನವು ಯುವಜನರನ್ನು ನಾಶ ಮಾಡುತ್ತಿದೆ. ಅದು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುವುದಲ್ಲದೇ ಇಡೀ ಸಮಾಜದ ಮೇಲೆ ತನ್ನ ಕರಾಳ ಛಾಯೆಯನ್ನು ಬೀರುತ್ತಿದೆ. ಜಾಮೀನು ಅರ್ಜಿಯ ಇತ್ಯರ್ಥದ ಸಂದರ್ಭದಲ್ಲಿ ನ್ಯಾಯಾಲಯವು ಇಂತಹ ಪಿಡುಗಿನ ದುಷ್ಪರಿಣಾಮಗಳನ್ನು ಉಪೇಕ್ಷಿಸಲಾಗದು ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT