ಬೆಂಗಳೂರು: ರಾಜ್ಯದ ಹಲವು ಭಾಗದಲ್ಲಿ ಗುಡುಗು–ಸಿಡಿಲು ಸಹಿತ ಶನಿವಾರ ರಭಸದ ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ತಾಯಿ, ಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯಬಸವನಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಮಹಾದೇವಿ ಭಜಂತ್ರಿ (40) ಹಾಗೂ ಅವರ ಮಗಳು ಸೋನಿ ಭಜಂತ್ರಿ (12) ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡು ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗಾಳೆಪ್ಪ (50) ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದೇ ದಿನದಲ್ಲಿ 14 ಸೆಂ.ಮೀ. ದಾಖಲೆಯ ಮಳೆಯಾಗಿದೆ. 2009ರಲ್ಲಿ 18 ಸೆಂ.ಮೀ ಮಳೆಯಾಗಿತ್ತು. ದಾವಣಗೆರೆ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಗೆ ಮನೆ, ಗದ್ದೆಗಳಿಗೆ ನೀರು ನುಗ್ಗಿದೆ.
ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ ಹಾಗೂ ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.