ಜ.8 ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ‘ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 6ರಿಂದ 8ರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಚಳಿಗಾಲದಲ್ಲೂ ಸಾಮಾನ್ಯವಾಗಿ ಜನವರಿ ಮತ್ತು ಫೆಬ್ರುವರಿ ಅವಧಿಯಲ್ಲಿ ಪೂರ್ವ ದಿಕ್ಕಿನಿಂದ ಗಾಳಿ ಬೀಸುವುದರಿಂದ ಈ ಎರಡೂ ತಿಂಗಳಿನಲ್ಲಿ ಆಗಾಗ ಮಳೆ ಸುರಿಯುತ್ತದೆ. ಜನವರಿ 8ರಂದು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, 9ರಿಂದ ಮಳೆ ದಿಢೀರ್ ತಗ್ಗಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
‘ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಬಹುದು’ ಎಂದು ಹೇಳಿದರು.
ಮಳೆ ಎಲ್ಲೆಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಕಿರವತ್ತಿ ಹಾಗೂ ಹಳಿಯಾಲದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೈಲಹೊಂಗಲ 2, ಸಾಗರದಲ್ಲಿ 1 ಸೆಂ.ಮೀ ಮಳೆಯಾಗಿದೆ. ಬೀದರ್ನಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಹಾಗೂ ಕಾರವಾರದಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.