ಬೆಂಗಳೂರು: ರೈತರಿಗೆ ಕನಿಷ್ಠ ಆದಾಯ ಖಾತರಿಯ ಭದ್ರತೆ ಒದಗಿಸಬೇಕು ಎನ್ನುವುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪಕ್ಷಕ್ಕೆ ರಾಜ್ಯ ರೈತ ಸಂಘನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಬೆಂಬಲ ನೀಡಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಈ ವಿಷಯ ತಿಳಿಸಿದರು.
‘ರಾಜ್ಯದಲ್ಲಿ ಯಾವುದೇ ಪಕ್ಷಗಳು ರೈತರ ಪ್ರಣಾಳಿಕೆಯನ್ನು ಒಪ್ಪಿಗೆ ಸೂಚಿಸಿ ಜಾರಿಗೊಳಿಸುವ ಭರವಸೆ ನೀಡಿದರೆ, ಆ ಪಕ್ಷಕ್ಕೆ ಬೆಂಬಲ ನೀಡಲಾಗುವುದು’ ಎಂದು ವಿವರಿಸಿದರು.
‘ಹಗಲು ವೇಳೆಯಲ್ಲಿ ಕೃಷಿ ಪಂಪ್ಸೆಟ್ಗಳಿಗೆ 10 ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು. ರೈತರ ಸಾಲ ಮನ್ನಾಗೊಳಿಸಬೇಕು. ಕೃಷಿ ಸಾಲ ನೀತಿ ಬದಲಾಯಿಸಿ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡ್ಡಿರಹಿತ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.
‘ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಬೇಕು’ ಎಂದು ಆಗ್ರಹಿಸಿದರು.