ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದೇ 22ರಿಂದ ರಾಜ್ಯ ಪ್ರವಾಸ ಮಾಡಲಿದ್ದು, 25 ಜಿಲ್ಲೆಗಳ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 23ರಂದು ಮಂಗಳೂರಿಗೆ ಬರುವ ಸುರ್ಜೇವಾಲ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ಒಂದು ವಾರ ರಾಜ್ಯ ಪ್ರವಾಸ ನಡೆಸಲಿರುವ ಅವರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸಭೆ ನಡೆಸಲಿದ್ದಾರೆ. ಹಾಲಿ, ಮಾಜಿ ಶಾಸಕರು, ಸಂಸದರು ಸೇರಿದಂತೆ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ನಿಟ್ಟನಲ್ಲಿ ಈ ಸರಣಿ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮುಂಬರುವ ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ಸರ್ಕಾರದ ವೈಫಲ್ಯ, ಜನರು ಎದುರಿಸುತ್ತಿರುವ ಸಂಕಷ್ಟ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.