ಬೆಂಗಳೂರು: ‘ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಾಂಗ್ರೆಸ್ ಕಾರಣ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ಜೊತೆ ಈ ಬಗ್ಗೆ ಚರ್ಚೆಗೆ ಸಿದ್ಧ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಎಂದು ಸವಾಲು ಹಾಕಿದರು.
ಪಕ್ಷದ ಮತ್ತೊಬ್ಬ ಮುಖಂಡ ಎಚ್.ಎಂ. ರೇವಣ್ಣ ಜೊತೆ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೆಲೆ ಏರಿಕೆ ಬಗ್ಗೆ ನಳಿನ್ ಕುಮಾರ್ ಕಟೀಲ್, ಸಿ.ಟಿ. ರವಿ ಅವರು ಜನರನ್ನು ದಾರಿ ತಪ್ಪಿಸಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ’ ಎಂದು ದೂರಿದರು.
‘ಯುಪಿಎ ಆಡಳಿತ ಅವಧಿಯಲ್ಲಿ ಕಚ್ಚಾ ತೈಲ ದರ ಹೆಚ್ಚಿದಾಗ,ಜನರ ಹಿತದೃಷ್ಟಿಯಿಂದ ತೈಲ ಬಾಂಡ್ ಬಿಡುಗಡೆ ಮಾಡಿದ್ದು ನಿಜ. ಈ ಬಾಂಡ್ ವಿತರಣೆ ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಾರಣ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಚ್.ಎಂ. ರೇವಣ್ಣ ಮಾತನಾಡಿ, ‘ಬಿಜೆಪಿ ಭಾವನಾತ್ಮಕವಾಗಿ ಪ್ರಚೋದನೆ ನೀಡುತ್ತದೆಯೇ ಹೊರತು ಜನಪರ ಕಾರ್ಯಕ್ರಮ ನೀಡುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷ ಇದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಯಡಿಯೂರಪ್ಪ ಅವರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಭಾವಿಸಿದ್ದೆ. ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರವೂ ಪರಿಸ್ಥಿತಿ ಬದಲಾಗಿಲ್ಲ. ಹೀಗಾದರೆ ರಾಜ್ಯದ ಗತಿ ಏನು’ ಎಂಬ ಪ್ರಶ್ನಿಸಿದರು.