ಮಡಿಕೇರಿ: ‘ರಾಜ್ಯದಲ್ಲಿ 2019 ಹಾಗೂ 2020ನೇ ಸಾಲಿನಲ್ಲಿ ಪ್ರವಾಹದಿಂದ ಸಂತ್ರಸ್ತರಾದವರ ಮನೆ ನಿರ್ಮಾಣಕ್ಕೆ ಎರಡು ಹಾಗೂ ಮೂರನೇ ಕಂತಿನ ಹಣ ಪಾವತಿಸಲು, ₹ 80 ಕೋಟಿಯನ್ನು ಈ ವಾರ ಬಿಡುಗಡೆ ಮಾಡಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಇಲ್ಲಿ ಮಂಗಳವಾರ ಭರವಸೆ ನೀಡಿದರು.
‘ಕಂದಾಯ ಇಲಾಖೆ ಮೂಲಕವೇ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಹಣ ಪಾವತಿಸಲಾಗುತ್ತಿತ್ತು. ಆದರೆ, ಆಯಾ ಜಿಲ್ಲಾಧಿಕಾರಿಗಳಿಗೆ ಕೆಲಸದ ಒತ್ತಡವಿದ್ದ ಕಾರಣಕ್ಕೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮಕ್ಕೆ ಈ ಜವಾಬ್ದಾರಿ ವಹಿಸಲಾಗಿತ್ತು. ತಕ್ಷಣವೇ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.