ಬೆಂಗಳೂರು: ಸಾರ್ವಜನಿಕ ಜಾಗದಲ್ಲಿ ದೇವಾಲಯ, ಮಸೀದಿ ಹಾಗೂ ಇತರ ಧಾರ್ಮಿಕ ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡದಂತೆ ತಡೆಯಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.
‘ಅಕ್ರಮ ನಿರ್ಮಾಣಗಳ ಬಗ್ಗೆ ಹಲವು ದೂರುಗಳು ಬಂದಿದ್ದರೂ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದೆ. ದೂರು ಪರಿಶೀಲಿಸಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸುವ ಅಗತ್ಯವಿದೆ’ ಎಂದು ಪೀಠ ಹೇಳಿತು.
ಸರ್ಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ 2009ರಲ್ಲಿ ಆದೇಶ ನೀಡಿತ್ತು. ಈ ಆದೇಶ ಪಾಲನೆ ಸಂಬಂಧ ಸ್ವಯಂಪ್ರೇರಿತವಾಗಿ ಮೇಲುಸ್ತುವಾರಿ ವಹಿಸುವಂತೆ ಹೈಕೋರ್ಟ್ಗಳಿಗೆ 2018ರಲ್ಲಿ ನಿರ್ದೇಶನ ನೀಡಿತ್ತು.