ಬೆಳಗಾವಿ: ‘ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು‘ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ವಿಧಾನಸಭೆಯಲ್ಲಿ ಜೆಡಿಎಸ್ನ ಎ.ಟಿ. ರಾಮಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ, ‘ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ಹಾಕಿರುವುದರಿಂದ ತೀವ್ರ ಸಮಸ್ಯೆಯಾಗುತ್ತಿದೆ. ಇಂತಹ ಉಬ್ಬುಗಳಿಂದ ಹಲವು ಕಡೆ ಅಪಘಾತಗಳು ಸಂಭವಿಸಿ ಜೀವಹಾನಿಯೂ ಸಂಭವಿಸಿದೆ’ ಎಂದರು.
ಅದಕ್ಕೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡಾ ದನಿಗೂಡಿಸಿದರು.
‘ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವು ಮಾಡಲೇಬೇಕು’ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದರು.
ಆಗ ಮಾತನಾಡಿದ ಕಾರಜೋಳ, ‘ಕೆಲವು ಕಡೆ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ಅಳವಡಿಸಲು ಶಾಸಕರ ಒತ್ತಡ ಕೂಡಾ ಕಾರಣ. ಹೀಗಾಗಿ, ತೆರವುಗೊಳಿಸಲು ಎಲ್ಲ ಶಾಸಕರು ಸಹಕರಿಸಬೇಕು’ ಎಂದು ಅವರು ಹೇಳಿದರು.