ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಮುಂದಿನ ವಾರ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ಈ ಸಂಬಂಧ ಸರ್ಕಾರದಲ್ಲಿ ಚರ್ಚೆ ಆರಂಭವಾಗಿದೆ ಎಂದು ಅವರು ಗುರುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿಂದೆಲ್ಲ ದೇಶಕ್ಕೆ ಸಂಕಷ್ಟ ಬಂದಾಗ ಆಡಳಿತ ವಿರೋಧ ಪಕ್ಷ ಎನ್ನದೇ ಒಗ್ಗಟ್ಟಿನಿಂದ ಹೋರಾಡುತ್ತಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
100 ಕೋಟಿ ಕಾಂಗ್ರೆಸ್ ಪಾರ್ಟಿ ಫಂಡಾ? ರಾಜ್ಯ ಸರ್ಕಾರ ₹449 ಕೋಟಿ ಕಾರ್ಮಿಕ ಕಲ್ಯಾಣ ನಿಧಿಯಿಂದ ಕೊಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ, ಹೌದು ಯಾಕೆ ಕೊಡಬಾರದು ಎಂದು ಪ್ರಶ್ನಿಸಿದರು.
ಜನರಿಗೆ ಲಸಿಕೆ ಕೊಡಲು ₹100 ಕೋಟಿ ಕೊಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ. ಆ ಹಣ ಕಾಂಗ್ರೆಸ್ ಪಾರ್ಟಿ ಫಂಡಾ? ಸರ್ಕಾರದ ಹಣವನ್ನೇ ತೆಗೆದುಕೊಂಡು ಕೊಡುವ ಪ್ಲಾನ್ ಮಾಡಿರುವ ಅವರು, ಪಕ್ಷದ ಹಣ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಅಶೋಕ ಛೇಡಿಸಿದರು.
ಆಂಬುಲೆನ್ಸ್ಗಳು ಕೇಳಿದ ಸ್ಥಳಕ್ಕೆ ಬರಲು ನಿರಾಕರಿಸಿದರೆ ಚಾಲಕರ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಎಲ್ಲಿಗೆ ಸೇವೆ ಕೇಳಿರುತ್ತಾರೋ ಅಲ್ಲಿಗೆ ರೋಗಿಗಳನ್ನು ಕರೆದೊಯ್ಯಬೇಕು ಎಂದು ಹೇಳಿದರು.
ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಎಲ್ಲ ತಾಲ್ಲೂಕುಗಳಲ್ಲೂ ಮಕ್ಕಳ ಆಸ್ಪತ್ರೆಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.