ನವದೆಹಲಿ: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ 2018ರಲ್ಲಿ ಜಯಿಸಿದ್ದ ಮುನಿರತ್ನ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ.
ಕಳೆದ ವಾರ ಈ ಮೇಲ್ಮನವಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಕಾಂಗ್ರೆಸ್ ಪಕ್ಷದ ಮುನಿರತ್ನ ಅವರು ಮತದಾರರ ನಕಲಿ ಗುರುತಿನ ಚೀಟಿ ಬಳಸಿ ಮತ ಪಡೆದು ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ದೂರಿ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ರಾಜ್ಯ ಹೈಕೋರ್ಟ್ ಗೆ ಮೊದಲು ಚುನಾವಣೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸದೆ ಬಾಕಿ ಇರಿಸಿಕೊಂಡಿರುವ ಹೈಕೋರ್ಟ್ ಕ್ಷೇತ್ರದ ಚುನಾವಣೆ ನಡೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಕೋರ್ಟ್ ಆದೇಶ ಹೊರಬಿದ್ದಿರುವುದರಿಂದ, ಇತ್ತೀಚೆಗೆ ಬಿಜೆಪಿ ಸೇರಿಕೊಂಡು ಟಿಕೆಟ್ ಆಕಾಂಕ್ಷಿ ಆಗಿರುವ ಅನರ್ಹ ಶಾಸಕ ಮುನಿರತ್ನ ಅವರ ಸ್ಪರ್ಧೆ ನಿರಾತಂಕವಾದಂತಾಗಿದೆ. ಬಿಜೆಪಿ ಹೈಕಮಾಂಡ್ ಇನ್ನಷ್ಟೇ ಟಿಕೆಟ್ ಘೋಷಣೆ ಮಾಡಬೇಕಿದೆ.