ಬೆಂಗಳೂರು: ಅಬಕಾರಿ ಇಲಾಖೆ ಈವರೆಗೆ ₹19,244 ಕೋಟಿ ಆದಾಯ ಗಳಿಸಿದ್ದು, ಮಾರ್ಚ್ ವೇಳೆಗೆ ಆ ಮೊತ್ತ ₹30 ಸಾವಿರ ಕೋಟಿಯನ್ನು ತಲುಪಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ವರ್ಷ ಇದೇ ಅವಧಿಯಲ್ಲಿ ₹16,641 ಕೋಟಿ ಆದಾಯ ಬಂದಿತ್ತು. ಕಳೆದ ವರ್ಷಕ್ಕಿಂತ ಸುಮಾರು ₹2,603 ಕೋಟಿ ಹೆಚ್ಚು ಆದಾಯ ಬಂದಿದೆ ಎಂದು ಹೇಳಿದರು.
ಈ ಸಾಲಿಗೆ ₹29,000 ಕೋಟಿ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಆ ಗುರಿಯನ್ನು ಮೀರಿ ಸುಮಾರು ₹1,000 ಕೋಟಿ ಹೆಚ್ಚುವರಿ ಗಳಿಕೆಯಾಗುವ ನಿರೀಕ್ಷೆ ಇದೆ. ಡಿಸೆಂಬರ್ ಮತ್ತು ಮಾರ್ಚ್ನಲ್ಲಿ ಹೆಚ್ಚು ಆದಾಯ ಬರಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಸುಮಾರು ₹10,000 ಕೋಟಿ ಸಂಗ್ರಹವಾಗಲಿದೆ ಎಂದರು.
ಹೊಸ ಮದ್ಯದಂಗಡಿಗಳನ್ನು ಆರಂಭಿಸಲು ಲೈಸೆನ್ಸ್ ನೀಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಆದ್ದರಿಂದ ಲೈಸೆನ್ಸ್ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಅಲ್ಲದೆ, ರಾಜ್ಯದಲ್ಲಿ ಕಳ್ಳಭಟ್ಟಿ ಮತ್ತು ಅಕ್ರಮ ಮದ್ಯ ಮಾರಾಟವನ್ನು ಮಟ್ಟ ಹಾಕಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಂಡ್ಯದಲ್ಲಿ ಬಿಜೆಪಿ ಶಕ್ತಿ ವರ್ಧನೆ:
ಮಂಡ್ಯದಲ್ಲಿ ಬಿಜೆಪಿಯ ಶಕ್ತಿ ವರ್ಧನೆ ಆಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಸಾಕಷ್ಟು ನಾಯಕರು ಬಿಜೆಪಿಯನ್ನು ಸೇರಲಿದ್ದಾರೆ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಹಲವು ಕ್ಷೇತ್ರಗಳಲ್ಲಿ ಗೆಲ್ಲುವ ಅವಕಾಶ ಹೆಚ್ಚಾಗಿದೆ. ಹಾಸನ ಜಿಲ್ಲೆಯಲ್ಲೂ ಅಚ್ಚರಿದಾಯಕ ಫಲಿತಾಂಶ ಬರಲಿದೆ ಎಂದು ಗೋಪಾಲಯ್ಯ ತಿಳಿಸಿದರು.