ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ ಕಾಯ್ದೆ ಹಿಂದೆ ಆರ್‌ಎಸ್‌ಎಸ್‌ ಹುನ್ನಾರ: ಸಿದ್ದರಾಮಯ್ಯ ವಾಗ್ದಾಳಿ

Last Updated 17 ಡಿಸೆಂಬರ್ 2021, 10:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ಹಿಂದೆ ಜನರ ಹಿತ ಇಲ್ಲ. ದೇಶದ ಕೋಮುಸೌಹಾರ್ದ ಹಾಳುಗೆಡಹುವುದೇ ಇದರ ದುರುದ್ದೇಶ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಲಾತ್ಕಾರದ ಮತಾಂತರ‌ ಈಗಲೂ ಶಿಕ್ಷಾರ್ಹ ಅಪರಾಧವಾಗಿರುವಾಗ ಹೊಸ ಕಾಯ್ದೆಯನ್ನು ರಚಿಸುವುದು ಯಾವ ಉದ್ದೇಶಕ್ಕೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರ ವಿರುದ್ಧ ಇತರರನ್ನು ಎತ್ತಿಕಟ್ಟುವ ದುರುದ್ದೇಶದಿಂದಲೇ ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿದೆ‘ ಎಂದು ಆರೋಪಿಸಿದ್ದಾರೆ

‘ಕಾಂಗ್ರೆಸ್ ಪಕ್ಷ ಜಾತಿ-ಧರ್ಮದ ಭೇದವಿಲ್ಲದೆ ಕ್ರಿಶ್ಚಿಯನರು ಸೇರಿದಂತೆ ಎಲ್ಲ ಸಮುದಾಯಗಳ ಜೊತೆಗಿರುತ್ತದೆ. ಯಾವ ಸಮುದಾಯದವರಿಗೂ ತೊಂದರೆಯಾಗಲು ಅವಕಾಶ ನೀಡುವುದಿಲ್ಲ‘ ಎಂದೂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

‘ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಛೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಆಚರಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಕಾಯಿದೆ ತರುವುದು ಸಂವಿಧಾನಬಾಹಿರ‘ ಎಂದು ಕಾಂಗ್ರೆಸ್‌ ನಾಯಕ ವಾಗ್ದಾಳಿ ನಡೆಸಿದ್ದಾರೆ.

‘ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಅಂತಹ ನಡೆಯನ್ನು ನಾವು ಸದನದ ಒಳಗೆ ಮತ್ತು ಹೊರಗೆ ವಿರೋಧಿಸುತ್ತೇವೆ‘ ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.

‘ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಅವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ‘ ಎಂದು ಕಾಂಗ್ರೆಸ್‌ ನಾಯಕ ತಿಳಿಸಿದ್ದಾರೆ.

‘ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದಾಗಬೇಕಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು‘ ಎಂಬುದನ್ನು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

‘ಬಿಜೆಪಿಯವರಿಗೆ ಜಾತಿ ಭೇದ,‌ ಧರ್ಮ ಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್.ಎಸ್.ಎಸ್‌ ಹುನ್ನಾರವೂ ಅಡಗಿದೆ‘ ಎಂದು ಮಾಜಿ ಸಿಎಂ ಟೀಕಿಸಿದ್ದಾರೆ.

‘ದಯೆಯೇ ಧರ್ಮದ ಮೂಲ ಎಂದು ಬಸವಣ್ಣ ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ‘ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT