ಬೆಂಗಳೂರು: ‘ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಆಗುತ್ತಿರುವ ಕಿರುಕುಳ ತಪ್ಪಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ವಿಧಾನಪರಿಷತ್ನಲ್ಲಿ ಶೂನ್ಯವೇಳೆಯಲ್ಲಿ ‘ಪ್ರಜಾವಾಣಿ’ಯಫೆ. 14ರ ಸಂಚಿಕೆಯಲ್ಲಿ ಪ್ರಕಟವಾದ ‘ಆರ್ಟಿಒ ಕೂಟ; ದಲ್ಲಾಳಿಗಳದ್ದೇ ಆಟ’ ವಿಶೇಷ ವರದಿ ಉಲ್ಲೇಖಿಸಿದ ಬಿಜೆಪಿಯ ತುಳಸಿ ಮುನಿರಾಜುಗೌಡ, ಆರ್ಟಿಒ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿದರು.
‘ಹಣ ಕೊಡದೆ ಯಾವ ಕೆಲಸಗಳೂ ನಡೆಯುತ್ತಿಲ್ಲ. ಮಧ್ಯವರ್ತಿಗಳ ಮೂಲಕವೇ ಹೋಗಬೇಕು. ಇದರಿಂದ ಚಾಲಕರು ಮತ್ತು ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದರು.
ಸಾರಿಗೆ ಸಚಿವ ಶ್ರೀರಾಮುಲು ಪರವಾಗಿ ಉತ್ತರಿಸಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ‘ಸರ್ಕಾರ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಬದ್ಧವಾಗಿದೆ’ ಎಂದರು.