ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕಬಳಿಕೆ ತಿದ್ದುಪಡಿ ಕಾಯ್ದೆಯಿಂದ ಗ್ರಾಮೀಣ ಪ್ರದೇಶ ಹೊರಗೆ

ನಗರ ಪ್ರದೇಶಗಳಿಗೆ ಮಾತ್ರ ಅನ್ವಯ
Last Updated 25 ಆಗಸ್ಟ್ 2022, 13:15 IST
ಅಕ್ಷರ ಗಾತ್ರ

ಬೆಂಗಳೂರು: ಭೂಕಬಳಿಕೆ ಕಾಯ್ದೆ ಇನ್ನು ಮುಂದೆ ನಗರ ಪ್ರದೇಶಗಳಿಗೆ ಮಾತ್ರ ಅನ್ವಯವಾಗಲಿದ್ದು, ಗ್ರಾಮಾಂತರ ಪ್ರದೇಶವನ್ನು ಆ ವ್ಯಾಪ್ತಿಯಿಂದ ಹೊರಗಿಡಲು ‘ಸೆಕ್ಷನ್‌ 2 ಡಿ’ಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಈ ತಿದ್ದುಪಡಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ತಿದ್ದುಪಡಿಯಿಂದಾಗಿ ಗ್ರಾಮೀಣ ಪ್ರದೇಶದ ರೈತರು ಭೂಕಬಳಿಕೆ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ. ರೈತರು ಅನಗತ್ಯವಾಗಿ ಭೂಕಬಳಿಕೆ ನ್ಯಾಯಾಲಯಕ್ಕೆ ಅಲೆಯುವುದು ತಪ್ಪುತ್ತದೆ. ಕಬಳಿಕೆಗೆ ಸಂಬಂಧಿಸಿದಂತೆ ಯಾವುದೇ ತಕರಾರುಗಳು ಇದ್ದರೆ ಕಂದಾಯ ಇಲಾಖೆಯೇ ಅದನ್ನು ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಿದೆ.

ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಭೂಕಬಳಿಕೆ ನಿಷೇಧ ಕಾಯ್ದೆ ತಂದಾಗ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿತ್ತು. ಸ‌ಣ್ಣ ಪುಟ್ಟ ಅತಿಕ್ರಮಣಕ್ಕೂ ರಾಜ್ಯದ ವಿವಿಧ ಭಾಗಗಳಿಂದ ಈ ವಿಶೇಷ ನ್ಯಾಯಾಲಯಕ್ಕೆ ಅಲೆದಾಡಬೇಕಾಗಿತ್ತು. ರೈತರು ಇದರಿಂದ ತೊಂದರೆ ಅನುಭವಿಸಿದ್ದರು. ಈಗ ರೈತರ ಬವಣೆಗೆ ಮುಕ್ತಿ ನೀಡಲಾಗಿದೆ ಎಂದು ಹೇಳಿದರು.

ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಗೊತ್ತಿಲ್ಲದೆಯೇ ಒತ್ತುವರಿ ಮಾಡಿದರೆ ಅದನ್ನು ಭೂಕಬಳಿಕೆ ಎಂದು ಈವರೆಗೆ ಪರಿಗಣಿಸಲಾಗುತ್ತಿತ್ತು. ಹೊಸ ತಿದ್ದುಪಡಿಯಿಂದ ಅದನ್ನು ಅತಿಕ್ರಮಣ ಎಂದು ಪರಿಗಣಿಸಲಾಗುವುದಿಲ್ಲ. ಭೂಕಬಳಿಕೆ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ. ಭೂಕಬಳಿಕೆ ಕಾಯ್ದೆಯು ನಗರ ಪ್ರದೇಶಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಮಾಧುಸ್ವಾಮಿ ತಿಳಿಸಿದರು.

ಪ್ರಸ್ತಾವಿತ ಕರಡು ತಿದ್ದುಪಡಿಯು ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ಧವಾಗಿರದೇ, ಗ್ರಾಮೀಣ ಪ್ರದೇಶದ ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ. ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್‌ ಹುಕುಂ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯವುದು ತಪ್ಪಿಸಿದಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

ಮಡಿದ ಯೋಧರ ಕುಟುಂಬಕ್ಕೆ ನೌಕರಿ
ಸೇನೆಯಲ್ಲಿ ಮಡಿದ ಯೋಧರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿಯನ್ನು ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆದರೆ ಅಂತಹ ಕುಟುಂಬಗಳಿಗೆ ₹25 ಲಕ್ಷ ಎಕ್ಸ್‌ಗ್ರೇಷಿಯಾ ಕೊಡುವುದಿಲ್ಲ. ನಿವೇಶನ ಅಥವಾ ಭೂಮಿ ನೀಡಬೇಕು ಎಂಬ ಬೇಡಿಕೆ ಇತ್ತು. ಇವೆಲ್ಲವುದರ ಬದಲಿಗೆ ಸರ್ಕಾರಿ ಉದ್ಯೋಗ ನೀಡುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ಇಂತಹ 400 ಕುಟುಂಬಗಳಿದ್ದು, 200 ಮಂದಿ ಅರ್ಹತೆ ಹೊಂದಿದ್ದಾರೆ.

ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ
ಮುಖ್ಯಮಂತ್ರಿಯವರ ರೈತ ವಿದ್ಯಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ.

‘ಡಿ’ ಗ್ರೂಪ್‌ ಆಯ್ಕೆಗೆ ಸಂದರ್ಶನ ಇಲ್ಲ
ರಾಜ್ಯ ಸರ್ಕಾರದ ‘ಡಿ’ ಗ್ರೂಪ್‌ ನೌಕರರ ಹುದ್ದೆಗಳಿಗೆ ಕೆಪಿಎಸ್‌ಸಿ ನಡೆಸುವ ನೇಮಕಾತಿಗಳಿಗೆ ಇನ್ನು ಮುಂದೆ ಸಂದರ್ಶನ (ವೈವಾ) ಇರುವುದಿಲ್ಲ. ಇದಕ್ಕಾಗಿ ಕರ್ನಾಟಕ ಲೋಕಸೇವಾ ಆಯೋಗದ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಕೇವಲ ಲಿಖಿತ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.

ಸೆ 12 ರಿಂದ ಅಧಿವೇಶನ
ಸೆಪ್ಟೆಂಬರ್‌ 12 ರಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದ್ದು. ಒಟ್ಟು 10 ದಿನಗಳು ನಡೆಯಲಿವೆ.

ಹೊಸ 8 ವಿಶ್ವವಿದ್ಯಾಲಯಗಳಿಗೆ ಅಸ್ತು
ನೂತನ ಎಂಟು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಾದಿ ಸುಗಮವಾಗಿದೆ. ಮಂಡ್ಯ ವಿಶ್ವವಿದ್ಯಾಲಯ ಹೊರತುಪಡಿಸಿ ಉಳಿದ 7 ವಿಶ್ವವಿದ್ಯಾಲಯಗಳ ಆರಂಭವನ್ನು ಈ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು.

ಈಗಾಗಲೇ ತಲಾ ₹ 2 ಕೋಟಿಯಂತೆ ಒಟ್ಟು ₹ 14 ಕೋಟಿ ರೂಪಾಯಿ ಒದಗಿಸಲಾಗಿದೆ. ಮಂಡ್ಯದ ಸರ್ಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವಾಗಿ ಮಾಡುವ ತೀರ್ಮಾನವನ್ನು ಈಚೆಗೆ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT